ಬೆಳಗಾವಿ: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶನಿವಾರ ಬೆಳಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಮೂಲದ ಕೆ ಆನಂದ್ (40) ಕಳೆದ ಒಂದೂವರೆ ವರ್ಷಗಳಿಂದ ಬೆಳಗಾವಿಯಲ್ಲಿ ನಿಯೋಜನೆಗೊಂಡಿದ್ದರು. ಅವರು ಇಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.
ಶನಿವಾರ ಬೆಳಿಗ್ಗೆ ಅವರು ಮನೆಯ ಕದ ತೆರೆಯದ ಕಾರಣ ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಾಗಿಲು ಒಡೆದಾಗ ಆನಂದ ಅವರು ಶವವಾಗಿ ಪತ್ತೆಯಾಗಿದ್ದಾರೆ. ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ, ಮತ್ತು ಇದು ಆತ್ಮಹತ್ಯೆಯ ಪ್ರಕರಣ ಎಂದು ಅವರು ಶಂಕಿಸಿದ್ದಾರೆ.
ಆದರೆ, ಇದುವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಪೊಲೀಸರ ಪ್ರಕಾರ, ಆನಂದ್ ಕಳೆದ ಎರಡು ದಿನಗಳಿಂದ ಕಚೇರಿಗೆ ಹೋಗುತ್ತಿರಲಿಲ್ಲ. ಇಂದು ಬೆಳಗ್ಗೆ ಅವರ ನಿವಾಸಕ್ಕೆ ಪೊಲೀಸ್ ತಂಡ ಆಗಮಿಸಿದಾಗ ಮುಖ್ಯ ಬಾಗಿಲಿಗೆ ಒಳಗಿನಿಂದ ಬೀಗ ಹಾಕಲಾಗಿತ್ತು. ನಂತರ ತಂಡವು ಬಾಗಿಲು ಒಡೆದು ನೋಡಿದಾಗ ಅವರು ನೆಲದ ಮೇಲೆ ನಿರ್ಜೀವವಾಗಿ ಬಿದ್ದಿರುವುದು ಕಂಡುಬಂದಿದೆ.
ದಂಡು ಮಂಡಳಿಯ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಆರೋಪ ಹಾಗೂ ದೂರುಗಳ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಈಗ ಸಿಇಒ ಆನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
Advertisement