ಸಂವಿಧಾನ ದಿನಾಚರಣೆ: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆರಂಭಿಸಿರುವ ಖಾತರಿ ಯೋಜನೆಗಳನ್ನು ಬಿಜೆಪಿ ನಾಯಕರಾದ ವಿವೈ ವಿಜಯೇಂದ್ರ, ಸಿಟಿ ರವಿ ಮತ್ತು ಗೋವಿಂದ ಕಾರಜೋಳ ಭಾನುವಾರ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಸಂವಿಧಾನ ದಿನಾಚರಣೆ’ ನಿಮಿತ್ತ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆರಂಭಿಸಿರುವ ಖಾತರಿ ಯೋಜನೆಗಳನ್ನು ಬಿಜೆಪಿ ನಾಯಕರಾದ ವಿವೈ ವಿಜಯೇಂದ್ರ, ಸಿಟಿ ರವಿ ಮತ್ತು ಗೋವಿಂದ ಕಾರಜೋಳ ಭಾನುವಾರ ತೀವ್ರವಾಗಿ ಟೀಕಿಸಿದ್ದಾರೆ.

ನೆಹರು ಕುಟುಂಬದ ಪ್ರತಿಯೊಬ್ಬ ಸದಸ್ಯರನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್ ಬಯಸುತ್ತದೆ.  ಡಾ. ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಕಾಂಗ್ರೆಸ್‌ನಿಂದ ಕಲಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಸಂವಿಧಾನ ದಿನಾಚರಣೆ’ ನಿಮಿತ್ತ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

'ಕಾಂಗ್ರೆಸ್ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿತು. ಅವರು ಸರಿಯಾದ ಗೌರವವನ್ನು ನೀಡಿ ಕೂಡ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರವನ್ನೂ ಮಾಡಲಿಲ್ಲ. ನವೆಂಬರ್ 26 ಅನ್ನು ಸಂವಿಧಾನ ಸಮರ್ಪಣಾ ದಿನವನ್ನಾಗಿ ಘೋಷಿಸುವ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದವರು ಪ್ರಧಾನಿ ನರೇಂದ್ರ ಮೋದಿ. ಎಲ್ಲರಿಗೂ ನ್ಯಾಯ ಕೊಡಿಸುವುದು ಬಿಜೆಪಿಯ ಉದ್ದೇಶವಾಗಿದೆ' ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಮೋದಿಯವರು ಅಂಬೇಡ್ಕರ್ ಆಶಯಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು. 

ಉಚಿತ ಯೋಜನೆಗಳ ಮೂಲಕ ಕಾಂಗ್ರೆಸ್ ಮತ ಬ್ಯಾಂಕ್ ರಕ್ಷಿಸಿಕೊಳ್ಳುತ್ತಿದೆ: ಸಿಟಿ ರವಿ

ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾತನಾಡಿ, ಕಾಂಗ್ರೆಸ್ ತನ್ನ ಒಡೆದು ಆಳುವ ರಾಜಕೀಯ ಮತ್ತು ಉಚಿತ ಕೊಡುಗೆಗಳ ಮೂಲಕ ದೀನದಲಿತರನ್ನು ಮೇಲೆತ್ತುವ ಪ್ರಯತ್ನಗಳನ್ನು ಮಾಡುವ ಬದಲು ತನ್ನ ಮತ ಬ್ಯಾಂಕ್ ಅನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಸಮಯದಲ್ಲಿ ಕೋಳಿ, ಬೇಳೆಕಾಳುಗಳು, ಮಾಂಸ ನೀಡುವ ಆಫರ್‌ಗಳ ಮೂಲಕ ಮತದಾರರನ್ನು ಸೆಳೆದಿತ್ತು. ಆದರೆ, ಇವುಗಳು ನಿಜವಾಗಿಯೂ ಬಡತನವನ್ನು ಪರಿಹರಿಸುವುದಿಲ್ಲ. ದಲಿತ ಮತದಾರರು ಇಂತಹ ಉಚಿತಗಳಿಗೆ ಮರುಳಾಗದೆ ಗುಣಮಟ್ಟದ ಶಿಕ್ಷಣ ಮತ್ತು ಸುಧಾರಿತ ಆರೋಗ್ಯ ಮೂಲಸೌಕರ್ಯಕ್ಕೆ ಒತ್ತಾಯಿಸಬೇಕು. ಜನರನ್ನು ಶಾಶ್ವತವಾಗಿ ಬಡತನಕ್ಕೆ ದೂಡುವ ಸಂಸ್ಕೃತಿಯ ವಿರುದ್ಧ ಎಚ್ಚರಿಕೆಯಿಂದಿರುವಂತೆ ಒತ್ತಾಯಿಸಿದರು.

ಡಾ. ಅಂಬೇಡ್ಕರ್ ಬದುಕಿರುವಾಗಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕಿತ್ತು. ಮೋದಿ ಸರ್ಕಾರ ಅಂಬೇಡ್ಕರ್ ಪಂಚತೀರ್ಥ ನಿರ್ಮಿಸಿದೆ. 2004ರಿಂದ 2014ರವರೆಗಿನ ಯುಪಿಎ ಸರ್ಕಾರ ಈ ಬಗ್ಗೆ ಯೋಚಿಸಲೇ ಇಲ್ಲ ಎಂದು ದೂರಿದರು.

ಕೇವಲ ವೋಟ್ ಬ್ಯಾಂಕ್‌ಗಾಗಿ ಬಳಕೆ: ಗೋವಿಂದ ಕಾರಜೋಳ

ಕಾಂಗ್ರೆಸ್ ದಲಿತರು ಮತ್ತು ಇತರ ಹಿಂದುಳಿದ ಜಾತಿಗಳನ್ನು ಕೇವಲ ವೋಟ್ ಬ್ಯಾಂಕ್‌ಗಳಾಗಿ ಬಳಸುತ್ತಿದೆ ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಗಣನೀಯವಾಗಿ ಸುಧಾರಿಸುವಲ್ಲಿ ವಿಫಲವಾಗಿದೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಜಾತಿ ವ್ಯವಸ್ಥೆ ನಿರ್ಮೂಲನೆ ಉದ್ದೇಶಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ ಒಡೆದು ಆಳುವ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಆರೋಪಿಸಿದರು.

ಸಿದ್ದರಾಮಯ್ಯ ಅಕ್ಕಿ, ಕೋಳಿ, ಕುರಿಗಳನ್ನು ಉಚಿತವಾಗಿ ನೀಡುವುದಾಗಿ ಹೇಳುತ್ತಾರೆ. ನಮಗೆ ಬೇಕಾಗಿರುವುದು ಶಿಕ್ಷಣ ಮಾತ್ರ ಎಂದರು.

ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಂವಿಧಾನವು ನಮ್ಮ ನಂಬಿಕೆ ಮತ್ತು ಧರ್ಮದ ಮುಂದುವರಿಕೆಯಾಗಿದೆ. ನಮ್ಮ ದೇಶದಲ್ಲಿ ನಮ್ಮ ನಂಬಿಕೆ ಮತ್ತು ಧರ್ಮಕ್ಕಿಂತ ಬೇರೆ ಯಾವುದೇ ಸಂವಿಧಾನವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com