ಬರ ಅಧ್ಯಯನ ಕುರಿತ ಕೇಂದ್ರ ತಂಡ ಇಂದಿನಿಂದ ನಾಲ್ಕು ದಿನ ರಾಜ್ಯ ಪ್ರವಾಸ

ರಾಜ್ಯದಲ್ಲಿನ ಬರ ಪರಿಸ್ಥಿತಿ ಅವಲೋಕಿಸಲು ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿವೆ. ರಾಜ್ಯ ಸರ್ಕಾರ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿನ ಬರ ಪರಿಸ್ಥಿತಿ ಅವಲೋಕಿಸಲು ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿವೆ. ರಾಜ್ಯ ಸರ್ಕಾರ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

 ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ರಾಜ್ಯದ  ಸ್ಥಳೀಯ ಅಧಿಕಾರಿಗಳೊಂದಿಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ. ಇಂದು ಬೆಳಗ್ಗೆ ಮೂರು ತಂಡಗಳು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿವೆ.  ಮಧ್ಯಾಹ್ನ 12 ಗಂಟೆಗೆ ವಿಧಾನಸೌಧ ಕೊಠಡಿಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಜಿಲ್ಲೆಗಳಿಗೆ ತೆರಳಲಿವೆ. 

ಕೇಂದ್ರ ಕೃಷಿ  ಮತ್ತು ರೈತರ ಕಲ್ಯಾಣ ಸಚಿವಾಲಯದ  ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ ಸಾಹು ಮತ್ತು ಕೃಷಿ ಆಯುಕ್ತ ಪಾಟೀಲ್ ಯಲಗೌಡ ಅವರನ್ನಳಗೊಂಡ ಕೇಂದ್ರ ಹಾಗೂ ರಾಜ್ಯ ಸರಕಾರದ ಅಧಿಕಾರಿಗಳನ್ನೊಳಗೊಂಡ ಮೊದಲ ತಂಡ ಬೆಳಗಾವಿ, ವಿಜಯಪುರ, ಬಾಗಲಕೋಟ, ಧಾರವಾಡಕ್ಕೆ ಭೇಟಿ ನೀಡಲಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹೆಚ್ಚುವರಿ ಸಲಹೆಗಾರ ಡಿ ರಾಜಶೇಖರ್ ನೇತೃತ್ವದ  ಮತ್ತು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಕರೀಗೌಡ  ಅವರನ್ನೊಳಗೊಂಡ ಎರಡನೇ ತಂಡ ತಂಡ  ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಲಿದೆ. ಕೇಂದ್ರ ಜಲ ಆಯೋಗದ ನಿರ್ದೇಶಕ ಅಶೋಕ್ ಕುಮಾರ್ ವಿ ನೇತೃತ್ವದ ಮೂರನೇ ತಂಡ  ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಗೆ ಭೇಟಿ ನೀಡಲಿದೆ.

ಬರ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಕೇಂದ್ರ ತಂಡದಲ್ಲಿರುವ ಅಧಿಕಾರಿಗಳು ಅಕ್ಟೋಬರ್ 9 ರಂದು ನವದೆಹಲಿಗೆ ತೆರಳುವ ಮೊದಲು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಸಭೆ ನಡೆಸಲಿದ್ದಾರೆ.
ಕೇಂದ್ರ ತಂಡಕ್ಕೆ ವಾಸ್ತವ ಪರಿಸ್ಥಿತಿ ವಿವರಿಸುವಂತೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ. ಕೆಲ ಗ್ರಾಮಗಳಲ್ಲಿ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಇನ್ನು ಕೆಲವೆಡೆ ಸಂಪೂರ್ಣ ಹಾನಿಯಾಗದಿದ್ದರೂ ಇಳುವರಿ ಗಣನೀಯವಾಗಿ ಕಡಿಮೆಯಾಗಲಿದ್ದು, ಕೇಂದ್ರ ತಂಡ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿವರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

100 ಅಡಿ ದಾಟಿದ ಕೆಆರ್ ಎಸ್ ಜಲಾಶಯ: ಕೊಡಗಿನ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿಯ ಗಡಿ ದಾಟಿದೆ. ಕಾವೇರಿ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳ ಪ್ರಕಾರ, ಬುಧವಾರ ಬೆಳಿಗ್ಗೆ 8 ಗಂಟೆವರೆಗೆ 124. 80 ಅಡಿ ಗರಿಷ್ಠ ಸಾಮಾರ್ಥ್ಯದ ಜಲಾಶಯದಲ್ಲಿ 100.36 ಅಡಿ ನೀರು ಸಂಗ್ರಹವಾಗಿತ್ತು.  ಒಳಹರಿವು 9,052 ಕ್ಯೂಸೆಕ್ ಇದ್ದರೆ, ಹೊರಹರಿವು 1,482 ಕ್ಯೂಸೆಕ್ ಇತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com