ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅಸ್ತು
ಬೆಂಗಳೂರು: ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ಅವರು, ಸಂಪುಟ ಸಭೆಯಲ್ಲಿ ಏಳು ವಿಷಯ ಪರಿಗಣಿಸಿದ್ದೇವೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಸಮಿತಿ ರಚಿಸಲಾಗಿತ್ತು. ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಸುಪ್ರಿಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣೆ, ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಇಂದು ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು ಎಂದರು.
ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅಡಿಯಲ್ಲಿ ಮೆದುಳಿನ ಆರೋಗ್ಯ, ಆರೈಕೆ, ತಲೆನೋವು ಹಾಗೂ ಒತ್ತಡ ನಿರ್ವಹಣೆ ಸೇರಿ ಹಲವು ಕಾರ್ಯಕ್ರಮಗಳಿಗೆ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅನುವು ಮಾಡಿಕೊಡಲಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ