ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 1 ರೂಪಾಯಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಹಾಗೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ದೊಡ್ಡದಾಗಿ ಹೇಳಿಕೊಂಡಿದ್ದರು. ಈ ನಿಟ್ಟಿನಲ್ಲಿ ಇಲ್ಲಿಯವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದರು.

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ನಮ್ಮ ಸಚಿವರು ಸಂಬಂಧಪಟ್ಟವರನ್ನು ಭೇಟಿ ಮಾಡಿದ್ದು, ನಾನು ಕೂಡ ಭೇಟಿ ಮಾಡಿದ್ದೇನೆ. ಆದರೆ ಆರು ತಿಂಗಳು ಕಳೆದರೂ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡುವುದಾಗಿ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹಣವನ್ನು ಮೀಸಲಿಡುವುದಾಗಿ ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯು ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾಗಿದೆ ಮತ್ತು ಇದು ಮಧ್ಯ ಕರ್ನಾಟಕದಲ್ಲಿ ಬರಪೀಡಿತ ಮತ್ತು ಒಣ ಭೂಮಿಯಲ್ಲಿ ಒಂದು ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸುವ ನಿರೀಕ್ಷೆಯಿದೆ. ಜೊತೆಗೆ, ಇದು ಕುಡಿಯುವ ನೀರಿನ ಯೋಜನೆಯಾಗಿದ್ದು, ಲಕ್ಷಾಂತರ ಜನರಿಗೆ ಪ್ರಯೋಜನವಾಗಲಿದೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಹಿಂದಿನ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು.

ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳ ಅನುದಾನ ಘೋಷಿಸಿದ್ದಕ್ಕೆ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತಸ ವ್ಯಕ್ತಪಡಿಸಿದ್ದರು. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅಭವಿಸಿದ್ದು, ಯೋಜನೆ ಸ್ಥಗಿತಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com