ಟೊಮೊಟೊ ಬೆಳೆದು ನಷ್ಟ: ಸಾಲಬಾಧೆಯಿಂದ ಪಾವಗಡದಲ್ಲಿ ದಂಪತಿ ಆತ್ಮಹತ್ಯೆ
ತುಮಕೂರು: ಸಾಲಬಾಧೆಯಿಂದ ಗಂಡ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಿ ರೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮನು(27), ಪವಿತ್ರ(24) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇಬ್ಬರೂ ತಮ್ಮ ಮನೆಯಲ್ಲಿ ಒಂದೇ ವೇಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಪಾವಗಡ ತಾಲೂಕಿನ ಪಾಲಕುಂಟೆಯ ಪವಿತ್ರ ಮತ್ತು ರೊಪ್ಪ ಗ್ರಾಮದ ಮನು ಅವರು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ ಎರಡು ವರ್ಷದ ಮಗಳಿದ್ದಾಳೆ. ಮಗುವನ್ನು ಪವಿತ್ರ ಅವರ ತವರು ಮನೆಯಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ.
ಅನ್ಯೋನ್ಯವಾಗಿದ್ದ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಮನೆಯ ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರು ಅನುಮಾನಗೊಂಡು ಕಿಟಕಿಯಲ್ಲಿ ನೋಡಿದ್ದಾರೆ. ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಟೊಮೆಟೊ ಸೇರಿದಂತೆ ವಿವಿಧ ಬೆಳೆಗಳಲ್ಲಿ ನಷ್ಟವಾಗಿತ್ತು. ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.