ಸುಳ್ಯ ವೈದ್ಯಕೀಯ ಕಾಲೇಜು ಅಧಿಕಾರಿಯ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ

ದಶಕದ ಹಿಂದೆ ದಕ್ಷಿಣ ಕನ್ನಡದ ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಎಎಸ್ ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಿಗೆ ಕರ್ನಾಟಕ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ದಶಕದ ಹಿಂದೆ ದಕ್ಷಿಣ ಕನ್ನಡದ ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಎಎಸ್ ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಿಗೆ ಕರ್ನಾಟಕ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯ ಡಾ.ರೇಣುಕಾ ಪ್ರಸಾದ್, ಮನೋಜ್ ರೈ, ನಾಗೇಶ್ ಎಚ್.ಆರ್, ವಾಮನ್ ಪೂಜಾರಿ ಮತ್ತು ಶಂಕರ ಆರೋಪಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.

ಸುಳ್ಯದಲ್ಲಿ 2011ರ ಏಪ್ರಿಲ್ 28ರಂದು ಸಂಜೆ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ರಾಮಕೃಷ್ಣ ಕೊಲೆಯಾಗಿದ್ದರು. ಡಾ.ರೇಣುಕಾ ಪ್ರಸಾದ್  ಮತ್ತು ರಾಮಕೃಷ್ಣ ನಡುವೆ ಆಸ್ತಿ ಹಂಚಿಕೆ ವಿಚಾರವಾಗಿ ಜಗಳ ನಡೆದಿತ್ತು, ಕತ್ತಿಯಿಂದ ಹಲ್ಲೆ ನಡೆಸಲಾಗಿತ್ತು.

2016ರ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ರದ್ದುಗೊಳಿಸಿ ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ಜಿ.ಬಸವರಾಜ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಖುಲಾಸೆಗೊಳಿಸಿದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಕೊಲೆ ಮತ್ತು ಒಳಸಂಚಿಗೆ ರೇಣುಕಾ ಪ್ರಸಾದ್‌ ಅವರೇ ಮುಖ್ಯ ಕಾರಣವಾಗಿದ್ದಾರೆ. ಹೀಗಾಗಿ, ಅವರು ಮೃತ ರಾಮಕೃಷ್ಣ ಅವರ ಪತ್ನಿಗೆ 10 ಲಕ್ಷ ರೂಪಾಯಿ ಪರಿಹಾರ ಪಾವತಿಸಬೇಕು ಎಂದು ನಿರ್ದೇಶಿಸಿರುವ ಪೀಠವು ತಲೆ ಮರೆಸಿಕೊಂಡಿರುವ ಐದನೇ ಆರೋಪಿ ಶರಣ್‌ ಪೂಜಾರಿ ಬಂಧನಕ್ಕೆ ವಾರೆಂಟ್‌ ಹೊರಡಿಸುವಂತೆ ಪುತ್ತೂರು ಸತ್ರ ನ್ಯಾಯಾಲಯಕ್ಕೆ ಸೂಚಿಸಿದೆ.

ಪ್ರಕರಣ ಸಂಬಂಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮೃತನ ಸಹೋದರ ರೇಣುಕಾ ಪ್ರಸಾದ್‌ ಮೊದಲ ಆರೋಪಿಯಾಗಿದ್ದು ಒಟ್ಟು ಏಳು ಆರೋಪಿಗಳಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ಅವರೆಲ್ಲರನ್ನೂ ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು 2016ರ ಅಕ್ಟೋಬರ್‌ 21ರಂದು ಆದೇಶಿಸಿತ್ತು. ಇದೀಗ ಹೈಕೋರ್ಟ್‌ ಅದನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಪೊಲೀಸ್ ಅಧಿಕಾರಿಗಳು ನೀಡಿದ ಪುರಾವೆಗಳನ್ನು ಮತ್ತು ಎಫ್‌ಎಸ್‌ಎಲ್ ವರದಿಯನ್ನು ಸರಿಯಾದ ದೃಷ್ಟಿಕೋನದಲ್ಲಿ ಪರಿಗಣಿಸಿಲ್ಲ ಎಂದು ನ್ಯಾಯಾಲಯವು  ಅಭಿಪ್ರಾಯ ಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com