ಕೈಗಾರಿಕಾ ಉದ್ದೇಶಕ್ಕಾಗಿ ಭೂ ಸ್ವಾಧೀನಕ್ಕೆ ದೇವನಹಳ್ಳಿ ರೈತರ ವಿರೋಧ, ಅಕ್ಟೋಬರ್ 25ಕ್ಕೆ ಸಭೆ: ಸಚಿವ ಎಂಬಿ ಪಾಟೀಲ್

ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ದೇವನಹಳ್ಳಿ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಅಕ್ಟೋಬರ್ 25ರಂದು ಈ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಎಂಬಿ ಪಾಟೀಲ್
ಎಂಬಿ ಪಾಟೀಲ್

ಬೆಂಗಳೂರು: ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ದೇವನಹಳ್ಳಿ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಅಕ್ಟೋಬರ್ 25ರಂದು ಈ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಬುಧವಾರ ಖನಿಜ ಭವನದಲ್ಲಿ ರೈತ ಪ್ರತಿನಿಧಿಗಳು ಮತ್ತು ಸರ್ಕಾರದ ನಡುವೆ ನಡೆದ ಸಭೆ ಯಾವುದೇ ಫಲಿತಾಂಶವನ್ನು ನೀಡಲಿಲ್ಲ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ 1,777 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಕ್ಟೋಬರ್ 25ರಂದು ಮತ್ತೊಂದು ಸಭೆ ಕರೆಯಲಾಗುವುದು. 13 ಗ್ರಾಮಗಳ ಜನರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡರಾದ ಬೈಯಾರೆಡ್ಡಿ, ಚುಕ್ಕಿ ನಂಜುಂಡಸ್ವಾಮಿ ಮತ್ತಿತರರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿದರು.

ಈ ಕುರಿತು ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆಯನ್ನು ರದ್ದುಗೊಳಿಸಬೇಕು. ನೂರಾರು ರೈತರ ಕುಟುಂಬಗಳು ಈ ಜಮೀನಿನ ಮೇಲೆ ಅವಲಂಬಿತವಾಗಿವೆ ಎಂದು ರೈತರು ಹೇಳಿದರು.

ಅಕ್ಟೋಬರ್ 25ರಂದು ನಡೆಯುವ ಸಭೆ ವಿಫಲವಾದಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸುವುದಾಗಿ ರೈತ ಪ್ರತಿನಿಧಿಗಳಿಗೆ ಸಚಿವರು ತಿಳಿಸಿದರು.

ಭೂಸ್ವಾಧೀನಕ್ಕೆ ಒಳಪಡುವ ಪ್ರತಿ ಎಕರೆಗೆ ಪರಿಹಾರವಾಗಿ ರೈತರಿಗೆ ಕೆಐಎಡಿಬಿ ಅಭಿವೃದ್ಧಿಪಡಿಸಿದ 10,800 ಚದರ ಅಡಿ ಭೂಮಿ ನೀಡಲು ಅವಕಾಶವಿದೆ ಮತ್ತು ಅದನ್ನು ಅವರು ವಾಣಿಜ್ಯ ಉದ್ದೇಶಗಳಿಗೆ ಬಳಸಬಹುದು ಎಂದು ಪಾಟೀಲ್ ವಿವರಿಸಿದರು.

ಕೈಗಾರಿಕೆಗಳ ಬೆಳವಣಿಗೆಗೆ ಅನುಕೂಲವಾಗುವಂತೆ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ದೇವನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಮಾತ್ರವಲ್ಲದೆ ರಾಜ್ಯದಾದ್ಯಂತ ಭೂಸ್ವಾಧೀನಕ್ಕೆ ಮುಂದಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com