ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆ.ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡುತ್ತಲೇ ಇದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಎದುರು ನೀಡುವ ಹೇಳಿಕೆಗಳೇ ಬಿಜೆಪಿಗೆ ಅಸ್ತ್ರವಾಗುತ್ತಿವೆ. ಹೀಗಾಗಿ ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ...
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡುತ್ತಲೇ ಇದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಎದುರು ನೀಡುವ ಹೇಳಿಕೆಗಳೇ ಬಿಜೆಪಿಗೆ ಅಸ್ತ್ರವಾಗುತ್ತಿವೆ. ಹೀಗಾಗಿ ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ,

ಶಾಸಕ ಅಶೋಕ್ ಪಟ್ಟಣ ಸೇರಿದಂತೆ ಪಕ್ಷದ ಹಲವು ಮುಖಂಡರು ಸರ್ಕಾರ ಬದಲಾವಣೆ ಕುರಿತು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರ ಹಂಚಿಕೆ, ಬೆಂಬಲ & ಇತರೆ ವಿಚಾರಗಳ ಕುರಿತು ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ಡಿಕೆ.ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

ಇದೇ ವೇಳೆ ಸಂಪುಟ ಪುನಾರಚನೆ ವಿಚಾರ ಕುರಿತ ಪ್ರಶ್ನೆಗೆ ಡಿಕೆ.ಶಿವಕುಮಾರ್ ಅವರು ನಿರಾಕರಿಸಿಲ್ಲ. ಪಕ್ಷದಲ್ಲಿ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಅದನ್ನು ನಾನು ಬಹಿರಂಗವಾಗಿ ಹೇಳಲಾರೆ. ನಾನು ಅದನ್ನು ಚರ್ಚಿಸಲು ಹೋಗುವುದಿಲ್ಲ. ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅಂತಹ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಶಿವಕುಮಾರ್ ಒಬ್ಬರೇ ಪಕ್ಷ ಅಧಿಕಾರಕ್ಕೆ ತಂದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಚರ್ಚೆ ಮಾಡಬಹುದು. ಆದರೆ, ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಮಾತನಾಡಬಾರದು. ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ ನಾನು ಎಲ್ಲಿಯೂ ಹೇಳಿಲ್ಲ. ಪಕ್ಷದ ಕಾರ್ಯಕರ್ತರು, ನಾವು, ನೀವು, ರಾಜ್ಯದ ಜನರು ಸೇರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಮುಂದೆ, ಯಾವತ್ತಿಗೂ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸತೀಶ್ ಜಾರಕಿಹೊಳಿಯವರು ಇತ್ತೀಚೆಗೆ 20 ಮಂದಿ ಶಾಸಕರನ್ನು ಮೈಸೂರು ಪ್ರವಾಸಕ್ಕೆ ಕರೆದುಕೊಂಡು ಹೋಗಲು ಚಿಂತನೆ ನಡೆಸಿದ್ದರು. ಆದರೆ, ಹೈಕಮಾಂಡ್ ಸೂಚನೆ ಬಳಿಕ ಈ ಚಿಂತನೆಯನ್ನು ಕೈಬಿಟ್ಟಿದ್ದರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com