ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಬುಧವಾರ ಬೆಳ್ಳಂಬೆಳಗ್ಗೆ ಮೇಲುಕಾಮನಹಳ್ಳಿ ಸಮೀಪದ ಅರಣ್ಯ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಡಬ್ಲ್ಯುಬಿ 37ಡಿ 5712 ನೋಂದಣಿ ಸಂಖ್ಯೆಯ ಬಸ್ ಪಲ್ಟಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು. ಗಾಯಗೊಂಡ ಪ್ರವಾಸಿಗರನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಪಶ್ಚಿಮ ಬಂಗಾಳದ ನೇಮತ್ಪುರದ ಪಕ್ಷಿರಾಜ್ ಟೂರ್ಸ್ ಮತ್ತು ಟ್ರಾವೆಲ್ಸ್ ಕಂಪನಿಯ ಮಾಲೀಕತ್ವದ ಬಸ್ ಇದಾಗಿದೆ.
ವನ್ಯಜೀವಿಗಳು ಹೆಚ್ಚಾಗಿ ಕಾಣಸಿಗುವ ಅರಣ್ಯದಲ್ಲಿ ಈ ಅವಘಡ ಸಂಭವಿಸಿದ್ದರೂ, ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸಿನೊಳಗೆ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
Advertisement