ರಾಮನಗರ ಜಿಲ್ಲೆ ಹೆಸರು ಬದಲಿಸಿದರೆ ಪ್ರಾಣ ಪಣಕ್ಕಿಟ್ಟು ಆಮರಣಾಂತ ಉಪವಾಸ: ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸರಕಾರ ಮುಂದಾದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸವಾಲು ಹಾಕಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸರಕಾರ ಮುಂದಾದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಬಗ್ಗೆ ನನಗೂ ಕನಸಿದೆ, ಆ ಕನಸಿಗಾಗಿ ನನಗೂ ಸವಾಲು ಇದೆ, ನೋಡೋಣ. ಆ ಜಿಲ್ಲೆಯ ಹೆಮ್ಮೆಯನ್ನು ಕಾಪಾಡಲು ಕೊನೆಯ ಕ್ಷಣದವರೆಗೂ ಹೋರಾಡುತ್ತೇನೆ. ಶಿವಕುಮಾರ್ ಅವರ ಕೊಡುಗೆಯನ್ನು ಪ್ರಶ್ನಿಸಿ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಪಟ್ಟಿ ಮಾಡಲಿ ಎಂದು ಸವಾಲು ಹಾಕಿದರು.

ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ, ರಾಮನಗರದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ, ಜಿಲ್ಲೆಗೂ ನನಗೂ ವ್ಯಾವಹಾರಿಕ ಸಂಬಂಧವಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿದರೆ ನನ್ನ ಪ್ರಾಣವನ್ನೇ ಪಣಕ್ಕಿಟ್ಟು, ಅನಾರೋಗ್ಯದ ನಡುವೆಯೂ ಆಮರಣಾಂತ ಉಪವಾಸ ಕೂರಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದರು. ನನ್ನ ಹೋರಾಟಕ್ಕೆ ರಾಮನಗರ ಜಿಲ್ಲೆಯ ಜನರ ಸಹಾಯ ಕೋರುತ್ತೇನೆ. ನಾನು ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದರೂ, ನನ್ನ ಜೀವನದ ಅಂತ್ಯ ರಾಮನಗರದಲ್ಲೇ ಎಂದರು.

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಮಾಡಿದ ರಸ್ತೆ, ಸೇತುವೆ ಮುಂತಾದ ಯೋಜನೆಗಳ ವಿವರವನ್ನು ನೀಡಿದ ಅವರು, ಡಿ.ಕೆ.ಶಿವಕುಮಾರ್ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಕುಮಾರಸ್ವಾಮಿ, ನಮ್ಮ ಹಳೆಯ ಸ್ನೇಹಿತರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡುವ ಸವಾಲು ಹಾಕಿದ್ದಾರೆ. ವರ್ಗಾವಣೆ ವಿಚಾರಣದಲ್ಲಿ ಒಂದು ರೂಪಾಯಿ ಪಡೆದಿಲ್ಲ ಎಂದು ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಲು ಸಿದ್ದ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com