ಚಿಕ್ಕಮಗಳೂರು: ಕರ್ನಾಟಕ ಅರಣ್ಯ ಇಲಾಖೆಯು ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿಯನ್ನು (ಡಿಆರ್ಎಫ್ಒ) ಅಮಾನತುಗೊಳಿಸಿದೆ ಮತ್ತು ಹುಲಿ ಉಗುರಿನ ಪೆಂಡೆಂಟ್ ಹೊಂದಿದ್ದ ಆರೋಪದ ಮೇಲೆ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪೋಟೊ ಕಾಣಿಸಿಕೊಂಡ ನಂತರ ಡಿಆರ್ಎಫ್ಒ ದರ್ಶನ್ ಕುಮಾರ್ ವಿರುದ್ಧ ಅರೇನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಖಾದರ್ ಅವರು ದೂರು ನೀಡಿದ್ದರು. ಈ ಅಧಿಕೃತ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಬಳಿಕ ಆ ಫೋಟೊಗಳನ್ನು ಡಿಲೀಟ್ ಮಾಡಲಾಗಿದೆ.
'ಡಿಆರ್ಎಫ್ಒ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ. ಸದ್ಯ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ತನಿಖೆಯಲ್ಲಿ ಏನೇ ಹೊರಬಂದರೂ ಅದನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು' ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರಣ್ಯಾಧಿಕಾರಿಗಳು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
Advertisement