ನಿಗಮ ಮಂಡಳಿ ಪರೀಕ್ಷೆಯಲ್ಲಿ ಅಕ್ರಮ: 13 ಮಂದಿ ಬಂಧನ

ಪಿಎಸ್‍ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯ ಬೆನ್ನಲ್ಲೇ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ನಿಗಮಗಳ ಖಾಲಿ ಹುದ್ದೆಗಳ ಪರೀಕ್ಷೆಯಲ್ಲೂ ಅಕ್ರಮಗಳು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಪಿಎಸ್‍ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯ ಬೆನ್ನಲ್ಲೇ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ನಿಗಮಗಳ ಖಾಲಿ ಹುದ್ದೆಗಳ ಪರೀಕ್ಷೆಯಲ್ಲೂ ಅಕ್ರಮಗಳು ಪತ್ತೆಯಾಗಿದೆ.

ಈ ಸಂಬಂಧ ಕಲಬುರಗಿ ಮತ್ತು ಯಾದಗಿರಿಯಲ್ಲಿ ಒಟ್ಟು 13 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಪಿಎಸ್‌ಐ ಪರೀಕ್ಷೆ ಹಗರಣದ ಕಿಂಗ್‌ಪಿನ್‌ಗಳಲ್ಲಿ ಒಬ್ಬರಾಗಿದ್ದ ಆರ್‌ಡಿ ಪಾಟೀಲ್ ಈ ಅಕ್ರಮದ ಹಿಂದಿರುವ ವ್ಯಕ್ತಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಪಾಟೀಲ್ ಜಾಮೀನಿನ ಮೇಲೆ ಹೊರಗಿದ್ದಾನೆ.

ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಬ್ಲ್ಯೂಟೂತ್ ಬಳಸಿ ಉತ್ತರ ಬರೆಯುತ್ತಿದ್ದರು ಎಂದು ತಿಳಿದುಬಂದಿದೆ. ಶರಣಬಸವೇಶ್ವರ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ತ್ರಿಮೂರ್ತಿ ತಳವಾರ ಎಂಬಾತನನ್ನು ಮೊದಲಿಗೆ ಪೊಲೀಸರು ಬಂಧನಕ್ಕೊಳಪಡಿಸಿದ್ದರು.

ವಿಚಾರಣೆ ವೇಳೆ ಈತ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ತನ್ನ ಸಹೋದರ ಅಂಬರೀಷ್ ಪರೀಕ್ಷೆ ಕೇಂದ್ರದ ಹೊರಗೆ ಕಾಲಿನಲ್ಲಿ ಕುಳಿತು ಮೊಬೈಲ್ ಫೋನ್ ಮೂಲಕ ಉತ್ತರ ಹೇಳುತ್ತಿದ್ದ. ಆರ್'ಡಿ.ಪಾಟೀಲ್ ಸಹೋದರನಿಗೆ ಸಹಾಯ ಮಾಡಿದ್ದ ಎಂದು ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಪೊಲೀಸರು ತ್ರಿಮೂರ್ತಿ (ಆರೋಪಿ 1), ಅವರ ಸಹೋದರ ಅಂಬರೀಶ್ (ಆರೋಪಿ 2) ಮತ್ತು ಆರ್‌ಡಿ ಪಾಟೀಲ್ (ಆರೋಪಿ 3) ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ತ್ರಿಮೂರ್ತಿ ಮತ್ತು ಆರ್.ಡಿ.ಪಾಟೀಲ ಇಬ್ಬರೂ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದವರಾಗಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಅಭಿಷೇಕ್ ಎಂಬಾತನನ್ನು ಕಲಬುರಗಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ. ಅಫಜಲಪುರದಲ್ಲೂ ಮೂವರನ್ನು ಬಂಧಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಯಾದಗಿರಿ ಎಸ್ಪಿ ಜಿ ಸಂಗೀತಾ ಅವರು ಮಾತನಾಡಿ, ಅಫಜಲಪುರ ತಾಲೂಕು ಮತ್ತು ವಿಜಯಪುರ ಜಿಲ್ಲೆಯಲ್ಲಿ ಒಂಬತ್ತು ಮಂದಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತ ಅಭ್ಯರ್ಥಿಗಳು ನ್ಯೂ ಕನ್ನಡ ಪಿಯು ಕಾಲೇಜು, ಸಬಾ ಪಿಯು ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಬಾಲಕಿಯರ ಎಲ್‌ಕೆಇಟಿ ಪಿಯು ಕಾಲೇಜು ಮತ್ತು ಮಹಾತ್ಮ ಗಾಂಧಿ ಪಿಯು ಕಾಲೇಜುಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ.  ವಿವಿಧ ನಿಗಮ ಮತ್ತು ಮಂಡಳಿಗಳಲ್ಲಿ ಖಾಲಿ ಇರುವ  ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಭಾನುವಾರವೂ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು  ಮಾತನಾಡಿ, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆಂದು ಹೇಳಿದ್ದಾರೆ.

ಕಲಬುರಗಿ ಮತ್ತು ಯಾದಗಿರಿ ಪೊಲೀಸರಿಂದ ವರದಿ ಬಂದ ನಂತರ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ನಾವು ವಿರೋಧ ಪಕ್ಷದಲ್ಲಿದ್ದಾಗ ಪಿಎಸ್‌ಐ ಹಗರಣವನ್ನು ಬಯಲಿಗೆಳೆದಿದ್ದೇವೆ. ಈಗ ನಾವು ಸರ್ಕಾರ ನಡೆಸುತ್ತಿದ್ದು, ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇವೆ. ಅಮಾಯಕರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com