ರಾಮನಗರ: ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಾಧುರಿ ಎಂದು ಗುರುತಿಸಲಾಗಿದೆ. ನಿದ್ರೆ ಮಾತ್ರೆ ಸೇವಿಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ವೀಡಿಯೋದಲ್ಲಿ ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾಳೆ.
ಹಣಕಾಸಿನ ವಿಚಾರವಾಗಿ ಮಾಧುರಿ ಚನ್ನಪಟ್ಟಣ ಗ್ರಾಮಾಂತರ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಿರಲಿಲ್ಲ ಎನ್ನಲಾಗಿದೆ. ಪೊಲೀಸ್ ಠಾಣೆಯಲ್ಲಿ ತನಗೆ ಪೊಲೀಸರು ಅವಮಾನ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ದೂರು ದಾಖಲಿಸಿಕೊಳ್ಳದೆ ಮಹಿಳೆಯನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ ಮತ್ತು ಸಂತ್ರಸ್ತೆಯ ವಿರುದ್ಧ ಹಲವು ವಂಚನೆ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಸಾವಿನ ನಂತರವಾದರೂ ತನಗೆ ನ್ಯಾಯ ಸಿಗುತ್ತದೆ ಎಂದು ಮಹಿಳೆ ಆತ್ಮಹತ್ಯೆಗೂ ಮುನ್ನ ವಿಡಿಯೋದಲ್ಲಿ ಹೇಳಿದ್ದಳು. ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ಮಪ್ಪಿದ್ದಾಳೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಸಂಬಂಧಿಕರು ಹಾಗೂ ಕುಟುಂಬಸ್ಥರು ರಾಮನಗರ ಎಸ್ಪಿ ಅವರನ್ನು ಭೇಟಿ ಮಾಡಿದ್ದಾರೆ. ಚನ್ನಪಟ್ಟಣ ಟೌನ್ ಇನ್ಸ್ ಪೆಕ್ಟರ್ ಶೋಭಾ ಹಾಗೂ ಇತರೆ ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ನೀಡಬೇಕಿದೆ.
Advertisement