ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆಗೆ ಕ್ರಮ- ಸಚಿವ ದಿನೇಶ್  ಗುಂಡೂರಾವ್

ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆ ಯೋಜನೆ ಅನುದಾನಿತ ಶಾಲಾ ಶಿಕ್ಷಕರಿಗೂ ಒದಗಿಸುವ ನಿಟ್ಟಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಂಗಳೂರು: ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆ ಯೋಜನೆ ಅನುದಾನಿತ ಶಾಲಾ ಶಿಕ್ಷಕರಿಗೂ ಒದಗಿಸುವ ನಿಟ್ಟಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಫಲಾನುಭವಿಗಳಾಗಿದ್ದಾರೆ.‌ ಪ್ರಮುಖ 7 ಆರೋಗ್ಯ ಸೇವೆಗಳನ್ನ ಉಚಿತವಾಗಿ ಯೋಜನೆ ಮೂಲಕ ಒದಗಿಸಲಾಗುತ್ತಿದೆ. ಅನುದಾನಿತ ಶಾಲಾ ಶಿಕ್ಷಕರನ್ನೂ ಯೋಜನೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಹೇಳಿದರು. 

ಅನುದಾನಿತ ಶಾಲಾ ಶಿಕ್ಷಕರು ಸಲ್ಲಿಸಿದ 13 ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು. ವಿಶೇಷವಾಗಿ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣ ವಿಚಾರದಲ್ಲಿ ನಿಯಮಗಳನ್ನ ಸರಳೀಕರಣಗೊಳಿಸುವ ಅಗತ್ಯತೆ ಇರುವುದು ನನ್ನ ಗಮನದಲ್ಲಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಣಯಗಳಾಗಬೇಕು. ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ತೀರ್ಮಾನಗಳನ್ನ ಕೈಗೊಳ್ಳೊಣ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅನುದಾನಿತ ಶಾಲೆ ಶಿಕ್ಷಕರಿಗೆ ಭರವಸೆ ನೀಡಿದರು.‌

ದೇಶದ ಪ್ರಗತಿಗೆ ಶಿಕ್ಷಣ ಮತ್ತು ಆರೋಗ್ಯ ಎರಡು ಪ್ರಮುಖವಾದವು. ಸಾಕ್ಷರತೆ ಹೆಚ್ಚಾದಷ್ಟು ಒಳ್ಳೆಯದು. ಅಲ್ಲದೇ ಆರೋಗ್ಯವಂತ ಸಮಾಜ ಕೂಡ ಇರಬೇಕು. ಎರಡು ಇದ್ದಾಗ ಮಾತ್ರ ದೇಶದ ಪ್ರಗತಿಗೆ ಹೆಚ್ಚು ಕೊಡುಗೆ ನೀಡಲು ಸಾಧ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. 

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು,  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕಾರ್ಯವೈಖರಿಯನ್ನ ಶ್ಲಾಘಿಸಿದರು. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಚಿವರಾದ ಬಳಿಕ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com