ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಆಯುಕ್ತರ ಕಚೇರಿಯಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ

ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಆಯುಕ್ತರ ಕಚೇರಿಯಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಮೇಯರ್ ವೀಣಾ ಭಾರದ್ವಾಜ್ ಸೇರಿದಂತೆ ಬಿಜೆಪಿ ಸದಸ್ಯರು, ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದ್ದು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನುಮತಿ ಸಿಕ್ಕಿದೆ. ಆದರೆ, ಪಾಲಿಕೆ ಆಯುಕ್ತರು ಅಧಿಕೃತವಾಗಿ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರನ್ನು ಮಧ್ಯಾಹ್ನ 12ಕ್ಕೆ ಭೇಟಿ ಮಾಡಿದ ಬಿಜೆಪಿ ಮುಖಂಡರು ಎರಡು ಗಂಟೆ ಮಾತುಕತೆ ನಡೆಸಿದರು. ಅನುಮತಿ ಸಿಗದ ಕಾರಣ ಹೊರಬಂದು ಪ್ರತಿಭಟನೆ ಆರಂಭಿಸಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನುಮತಿ ಸಿಕ್ಕಿದೆ. ಆದರೆ, ಪಾಲಿಕೆ ಆಯುಕ್ತರು ಅಧಿಕೃತವಾಗಿ ಅನುಮತಿ ನೀಡುತ್ತಿಲ್ಲ. ಅದಕ್ಕೆ ಗಣೇಶೋತ್ಸವ ಸಮಿತಿಯ ಪರವಾಗಿ ಆಯುಕ್ತರನ್ನು ಭೇಟಿಯಾಗಿದ್ದೇವೆ. ಆಯುಕ್ತರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಅನುಮತಿ ಕೊಡುತ್ತಿಲ್ಲ. ಅನುಮತಿ ಸಿಗುವವರೆಗೆ ಆಯುಕ್ತರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರಲು‌‌‌ ಮುಸ್ಲಿಮರಷ್ಟೇ ಅಲ್ಲ, ಹಿಂದೂಗಳು ಕೂಡ ಮತ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಅರಿಯಬೇಕು’ ಎಂದು ಹೇಳಿದರು.

‘ಈದ್ಗಾ ಮೈದಾನವು ಮಹಾನಗರ ಪಾಲಿಕೆ ಆಸ್ತಿ ಎಂಬುದನ್ನು ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಅಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ನೀಡಲು ಪಾಲಿಕೆಗೆ ಅವಕಾಶವಿದೆ. ಬರೀ ಮುಸ್ಲಿಂ ಧರ್ಮೀಯರ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡುವಂತೆ ಎಲ್ಲೂ ಹೇಳಿಲ್ಲ. ಹೀಗಾಗಿ ಕಳೆದ ಸಲದಂತೆ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು’ ಎಂದು ಅವರು ಆಗ್ರಹಿಸಿದರು.

ಅಲ್ಪಸಂಖ್ಯಾತರ ಬೆಂಬಲ ಪಡೆಯುವ ಸಲುವಾಗಿ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ನಮಗೆ ಪ್ರವೇಶಕ್ಕೆ ಅನುಮತಿ ಸಿಗುವವರೆಗೆ ಧರಣಿ ಮುಂದುವರಿಯುತ್ತದೆ, ಆಯುಕ್ತರ ಕಚೇರಿ ಅನುಮತಿಯೊಂದಿಗೆ ನಿರ್ಗಮಿಸುತ್ತೇವೆ. ಈದ್ಗಾ ಮೈದಾನದಲ್ಲಿ ಆಚರಣೆಯನ್ನು ನಿಷೇಧಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಅಂಜುಮನ್-ಎ-ಇಸ್ಲಾಂಗೆ ಸರ್ಕಾರ ಅನುಮೋದನೆ ನೀಡುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂಬರುವ ಗಣೇಶ ಚತುರ್ಥಿ ಹಬ್ಬಕ್ಕೆ ಅನುಮತಿ ನೀಡಲು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆಯೇ ಹೊರತು ಆಚರಣೆಗೆ ಅನುಮತಿ ನೀಡುತ್ತಿಲ್ಲ. ರಾಣಿ ಚೆನ್ನಮ್ಮ ಈದ್ಗಾ ಗಣೇಶ ಉತ್ಸವ ಸಮಿತಿಗೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಸಭೆ ನಿರ್ಣಯ ಕೈಗೊಂಡಿದೆ. ಆದರೆ ರಾಜ್ಯ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಗಣೇಶ ಭಕ್ತಾದಿಗಳಿಗೆ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡುತ್ತಿಲ್ಲ  ಎಂದು ಬೆಲ್ಲದ್ ಹೇಳಿದರು.

ಕಳೆದ ವರ್ಷ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಅಂಜುಮನ್-ಇ-ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಆದೇಶದಲ್ಲಿ, ಮೈದಾನವು ಹುಬ್ಬಳ್ಳಿ-ಧಾರವಾಡ ನಗರಸಭೆಯ ಆಸ್ತಿಯಾಗಿದ್ದು, ಅವರು ಬಯಸಿದವರಿಗೆ ಭೂಮಿಯನ್ನು ನೀಡಬಹದು. ಕಳೆದ ವರ್ಷ ಮೊದಲ ಬಾರಿಗೆ ವಿವಾದಿತ ಮೈದಾನದಲ್ಲಿ ಹಿಂದೂ ಹಬ್ಬವನ್ನು ಆಚರಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com