'ಕಾವೇರಿ'ದ ವಿವಾದ: ತುರ್ತು ಸರ್ವಪಕ್ಷ ಸಭೆಗೆ ವಿರೋಧ ಪಕ್ಷಗಳ ಪ್ರಮುಖ ನಾಯಕರು ಗೈರು

ರಾಜ್ಯದಲ್ಲಿ ಬರ ಪರಿಸ್ಥಿತಿ ನಡುವೆ ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಉಂಟಾಗಿರುವ ವಿವಾದ ಕುರಿತು ನಿನ್ನೆ ಬುಧವಾರ ಕರೆದಿದ್ದ ತುರ್ತು ಸರ್ವಪಕ್ಷ ಸಭೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಗೈರಾಗಿದ್ದರು.
ಸಿಎಂ ಸಿದ್ದರಾಮಯ್ಯ ಕರೆದಿದ್ದ ಕಾವೇರಿ ತುರ್ತು ಸಭೆ
ಸಿಎಂ ಸಿದ್ದರಾಮಯ್ಯ ಕರೆದಿದ್ದ ಕಾವೇರಿ ತುರ್ತು ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಡುವೆ ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಉಂಟಾಗಿರುವ ವಿವಾದ ಕುರಿತು ನಿನ್ನೆ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದ ತುರ್ತು ಸರ್ವಪಕ್ಷ ಸಭೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಗೈರಾಗಿದ್ದರು. ಯಡಿಯೂರಪ್ಪನವರು ದೆಹಲಿಗೆ ಹೋಗಿದ್ದರು. 

ಈ ಬಗ್ಗೆ ಟ್ವೀಟ್ ಮಾಡಿದ್ದ ಯಡಿಯೂರಪ್ಪ, ಸರ್ಕಾರವು ಸಭೆಯ ಬಗ್ಗೆ ಕೊನೆಯ ಗಳಿಗೆಯಲ್ಲಿ ತಿಳಿಸಿತ್ತು. ಆದರೆ, ನನ್ನ ಕ್ಷೇತ್ರದಲ್ಲಿ ಪೂರ್ವನಿಗದಿತ ಸಭೆಯಲ್ಲಿ ಭಾಗವಹಿಸಿದ್ದರಿಂದ ನನಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕಾವೇರಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮತ್ತು ಸಿಡಬ್ಲ್ಯುಎಂಎಗೆ ರಾಜ್ಯದ ವಸ್ತುಸ್ಥಿತಿಯನ್ನು ಮನವರಿಕೆ ಮಾಡಬೇಕು ಎಂದಿದ್ದಾರೆ.

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರೊಂದಿಗಿನ ಸಭೆಯಲ್ಲಿ ನಿರತರಾಗಿದ್ದ ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ಕೂಡ ಸಭೆಗೆ ಆಗಮಿಸಿರಲಿಲ್ಲ.

ಸಭೆಯಲ್ಲಿ ಭಾಗವಹಿಸಿದ್ದ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ, ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವನ್ನು ಬೆಂಬಲಿಸಿದರು. ಆದರೆ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಗೆ ಒತ್ತಾಯಿಸುವ ಕ್ರಮವನ್ನು ಅವರು ವಿರೋಧಿಸಿದರು. ತಮಿಳುನಾಡು ಎಲ್ಲಾ ಕಾನೂನು ಮಾರ್ಗಗಳನ್ನು ತೆಗೆದುಕೊಳ್ಳುತ್ತದೆ, ರಾಜ್ಯ ಸರ್ಕಾರವೂ ಇದನ್ನು ಅನುಸರಿಸಬೇಕು ಎಂದರು. 

ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನನ್ನ ಪತಿ ಅಂಬರೀಶ್ ಕೇಂದ್ರ ಸಚಿವರಾಗಿದ್ದಾಗ ಸಮಸ್ಯೆ ಬಗೆಹರಿಯಲಿಲ್ಲ. ಹೀಗಾಗಿ ಮಂಡ್ಯದ ರೈತರ ಪರ ನಿಲ್ಲಲು ಅಂಬರೀಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ರಾಜ್ಯ ಸರ್ಕಾರವು ಅಧಿಕಾರಿಗಳ ಮುಂದೆ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ವರ್ಷಗಳಿಂದ ತನ್ನ ಪ್ರಕರಣವನ್ನು ಸಮರ್ಥವಾಗಿ ಸಮರ್ಥಿಸಿಕೊಂಡಿಲ್ಲ. ನಾವು ತಮಿಳುನಾಡಿನಂತೆ ಆಕ್ರಮಣಕಾರಿಯಾಗಬೇಕಿತ್ತು, ಅದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ, ಅದನ್ನು ನಾವು ಕೂಡ ಮಾಡಬೇಕಾಗಿತ್ತು ಎಂದು ಹೇಳಿದರು. 

ಇದೇ ವೇಳೆ ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮೊನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ನೀರು ಬಿಡದಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು ಎಂದು ಹೇಳಿದರು. 

ಸಚಿವರಾದ ಡಾ.ಜಿ.ಪರಮೇಶ್ವರ, ಎಚ್.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಎಚ್.ಮುನಿಯಪ್ಪ, ಕೆ.ಎನ್.ರಾಜಣ್ಣ, ಎನ್.ಎಸ್.ಬೋಸರಾಜು, ಕೆ.ವೆಂಕಟೇಶ್, ಜಮೀರ್ ಅಹಮದ್ ಖಾನ್, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com