ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ತೀವ್ರ ಬರಗಾಲ ಉಂಟಾಗಿರುವ ಪರಿಸ್ಥಿತಿಯಲ್ಲಿ ತಮಿಳು ನಾಡಿಗೆ ಕಾವೇರಿ ನೀರು ಬಿಡುಗಡೆ ಅಸಾಧ್ಯವೆಂಬ ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ನಿರ್ಧಾರವನ್ನು ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಕೋರುವಂತೆ ಜಲಸಂಪನ್ಮೂಲ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ.
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ಬಿಡುವಂತೆ ಸಿಡಬ್ಲ್ಯುಆರ್ಸಿ ರಾಜ್ಯಕ್ಕೆ ನಿರ್ದೇಶನ ನೀಡಿದೆ.
ಶಿವಕುಮಾರ್ ಅವರು ರಾಜಸ್ತಾನದ ಜೈಪುರದಲ್ಲಿ ಅಣೆಕಟ್ಟು ಸುರಕ್ಷತೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಶೇಖಾವತ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಮುಂದಿನ 15 ದಿನಗಳ ಕಾಲ ಬಿಳಿಗುಂಡ್ಲುವಿಗೆ 5,000 ಕ್ಯೂಸೆಕ್ ನೀರು ಹರಿಸಲು ಕೆಆರ್ಎಸ್ ಮತ್ತು ಕಬಿನಿಯಿಂದ ನೀರು ಬಿಡಬೇಕು ಎಂಬ ಸಿಡಬ್ಲ್ಯುಆರ್ಸಿ ಆದೇಶವನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಿಲ್ಲ, ಕರ್ನಾಟಕ ಜನತೆಯ ಕುಡಿಯುವ ನೀರು, ನೀರಾವರಿ, ಜಾನುವಾರುಗಳ ರೈತರ ಹಿತಾಸಕ್ತಿಗಳಿಗೆ ಧಕ್ಕೆಯನ್ನುಂಟುಮಾಡಲು ಸರ್ಕಾರ ಸಿದ್ಧವಿಲ್ಲ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಅಹವಾಲುಗಳನ್ನು ಪರಿಗಣಿಸಲು ಮತ್ತು ಮುಂದಿನ 15 ದಿನಗಳವರೆಗೆ 5000 ಕ್ಯೂಸೆಕ್ ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶಿಸಿದ CWRC ನಿರ್ಧಾರವನ್ನು ಪರಿಶೀಲಿಸಲು CWMA ಗೆ ಕೋರಲು ಡಿಸಿಎಂ ಕೇಂದ್ರ ಸಚಿವರಿಗೆ ಮನವಿ ಮಾಡಿದರು.
ತಮಿಳುನಾಡಿಗೆ ನೀರು ಬಿಡಬಾರದು ಮತ್ತು ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Advertisement