ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಾಸಕ ಮಹೇಶ ಟೆಂಗಿನಕಾಯಿ ಕೂಡಾ ಇಂದು ಪ್ರತಿಭಟನಾಕಾರರೊಂದಿಗೆ ಧರಣಿಯಲ್ಲಿ ಕುಳಿತು ಬೆಂಬಲ ವ್ಯಕ್ತಪಡಿಸಿದರು. ಸರ್ಕಾರ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಗಸ್ಟ್ 31ರಂದೇ ಠರಾವು ಪಾಸಾಗಿದೆ. ಆದರೆ, ಪಾಲಿಕೆ ಆಯುಕ್ತರು ಈವರೆಗೂ ಅನುಮತಿ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಈಗಾಗಲೇ ಸಮಸ್ತ ಹಿಂದೂ ಸಮಾಜ ನಿರ್ಣಯ ತೆಗೆದುಕೊಂಡಿದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡೇ ಮಾಡುತ್ತೇವೆ. ಯಾವುದಕ್ಕೂ ಬಗ್ಗುವುದಿಲ್ಲ ಎಂದರು.
ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವುದನ್ನು ಸ್ಥಳೀಯ ಆಡಳಿತಕ್ಕೆ ಬಿಟ್ಟಿದ್ದೇವೆ ಎಂದು ತಿಳಿಸಿದರು.
Advertisement