ಬೆಂಗಳೂರು: ರಾಜ್ಯದ ಯಾವುದೆ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಬೆಕ್ಕುಗಳಿಗೆ ತಗಲುವ ಮಾರಕ ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಾಣು ಸೋಂಕಿನಿಂದ 7 ಚಿರತೆ ಮರಿಗಳು ಮತ್ತು ಉದರ ಸಂಬಂಧಿ ಕಾಯಿಲೆಯಿಂದ ಹಾಗೂ ಪರಸ್ಪರ ಸಂಘರ್ಷದಿಂದ 16 ಜಿಂಕೆಗಳು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಗುರುವಾರ ಉದ್ಯಾನವನಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಉದ್ಯಾನವನದಲ್ಲಿ ಚಿರತೆಗಳಿಗೆ ಸೋಂಕು ಬಂದಿರುವ ಹಿನ್ನೆಲೆಯಲ್ಲಿ ಇಲ್ಲಿನ ಯಾವುದೆ ಸಿಬ್ಬಂದಿ ರಾಜ್ಯದ ಬೇರೆ ಯಾವುದೆ ಮೃಗಾಲಯಕ್ಕೆ ಭೇಟಿ ನೀಡದಂತೆ ಆದೇಶ ನೀಡಿದರು. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡುಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸೂಚನೆ ನೀಡಿದರು.
ಮೃಗಾಲಯ ಅತ್ಯಂತ ಸುರಕ್ಷಿತ ಮತ್ತು ಸಂರಕ್ಷಿತ ತಾಣವಾಗಿದ್ದು ಇಲ್ಲಿ ಇಷ್ಟು ಪ್ರಮಾಣದಲ್ಲಿ ಮೃಗಗಳ ಸಾವು ನಿಜಕ್ಕೂ ಆಘಾತಕಾರಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆವಹಿಸಿ. ಅರಣ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಸಮನ್ವಯದೊಂದಿಗೆ ಎಲ್ಲ ಪ್ರಾಣಿಗಳನ್ನು ಗಮನವಿಟ್ಟು ಪರೀಕ್ಷಿಸಿ ಅವುಗಳ ಆರೈಕೆ ಮತ್ತು ಸಂರಕ್ಷಣೆಗೆ ಆದ್ಯತೆ ನೀಡಬೇಕು. ಯಾವುದೇ ವೈಮನಸ್ಯ ಮನಸ್ತಾಪದಿಂದ ಸಂಸ್ಥೆಗೆ, ಸರಕಾರಕ್ಕೆ ಕೆಟ್ಟ ಹೆಸರು ಬಾರದಂತೆ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಯಾವುದೇ ವನ್ಯಮೃಗಗಳು ಹಠಾತ್ ಅಥವಾ ಅನುಮಾಸ್ಪದ ರೀತಿಯಲ್ಲಿ ಸಾವಿಗೀಡಾದರೆ ತಕ್ಷಣವೇ ಸರಕಾರಕ್ಕೆ ಮತ್ತು ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆಯೂ ಆದೇಶಿಸಿದರು.
2023 -24 ನೇ ಸಾಲಿನಲ್ಲಿ ವನಮಹೋತ್ಸವದಲ್ಲಿ ರಾಜ್ಯಾದ್ಯಂತ ನೆಡಲಾಗಿರುವ ನಾಲ್ಕು ಮುಕ್ಕಾಲು ಕೋಟಿಗೂ ಹೆಚ್ಚು ಸಸಿಗಳನ್ನು ನೆಡಲಾಗಿದ್ದು, ಈ ಪೈಕಿ ಎಷ್ಟು ಸಸಿಗಳು ಬದುಕುಗಳಿದಿವೆ ಎಂಬುದರ ಕುರಿತಂತೆ ಸಮೀಕ್ಷೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement