ಸಿಂಗಾಪುರಕ್ಕೆ ಅಕ್ಕಿ ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು: ಕೇಂದ್ರ ಸರ್ಕಾರ ಸಿಂಗಾಪುರಕ್ಕೆ ಅಕ್ಕಿ ನೀಡುತ್ತದೆ. ಆದರೆ, ಕರ್ನಾಟಕ ರಾಜ್ಯಕ್ಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕರ್ನಾಟಕದಲ್ಲಿನ ಬಡ ಜನರಿಗೆ ಅಕ್ಕಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಾವು ಅಕ್ಕಿಗಾಗಿ ಹಣ ಕೊಡುತ್ತೇವೆ ಎಂದು ಹೇಳಿದರೂ ಇಂದಿಗೂ ಅಕ್ಕಿ ಕೊಡುತ್ತಿಲ್ಲ. ಬಡವರಿಗೆ ಅಕ್ಕಿ ನೀಡಬೇಕಿತ್ತು ಆದರೆ ನೀಡಿಲ್ಲ. ಬಿಜೆಪಿ ಮತ್ತು ಕೇಂದ್ರ ಸರ್ಕಾರ ಬಡವರ ವಿರುದ್ಧ ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಟೀಕಾ ಪ್ರಹಾರ ನಡೆಸಿದರು.
ಇದೇ ವೇಳೆ ಕಾವೇರಿ ನೀರು ವಿವಾದ ಕುರಿತು ಮಾತನಾಡಿದ ಮುಖ್ಯಮಂತ್ರಿ, ದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಮ್ಮ ಎಲ್ಲಾ ಸಂಗತಿಗಳನ್ನು ಸಲ್ಲಿಸಿದ್ದೇವೆ. ಪ್ರಾಧಿಕಾರದ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಬಹುದೇ ಎಂಬುದರ ಬಗ್ಗೆ ನಿವೃತ್ತ ನ್ಯಾಯಾಧೀಶರು ಹಾಗೂ ಕಾನೂನು ತಂಡದೊಂದಿಗೆ ಸಭೆ ನಡೆಸಿ, ನಂತರ ಏನು ಮಾಡಬೇಕೆಂದು ನಿರ್ಧರಿಸಲಾಗುವುದು ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ