ಧಾರವಾಡ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಜಾಮೀನ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 26ಕ್ಕೆ ಮುಂದೂಡಿದೆ.
ಜಾಮೀನು ಕೋರಿ ಮುರುಘಾ ಶ್ರೀಗಳು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.
ಪ್ರಕರಣ ಸಂಬಂಧ ಹಿರಿಯ ವಕೀಲರು ಖುದ್ದು ಹಾಜರಾಗಿ ವಾದ ಮಂಡಿಸಲಿದ್ದು, ಇದಕ್ಕೆ ಅವಕಾಶ ನೀಡಬೇಕು ಎಂದು ಶ್ರೀಗಳ ಪರ ವಕೀಲರು ಮನವಿ ಮಾಡಿದರು. ಅಂತೆಯೇ ಸಂತ್ರಸ್ತ ಬಾಲಕಿಯರ ಪರವಾಗಿ ತಾವು ವಾದ ಮಂಡಿಸುವುದಾಗಿ ವಕೀಲ ಡಿಸಿ ಶ್ರೀನಿವಾಸ್ ಅವರು ತಿಳಿಸಿದರು. ಇದನ್ನು ಮಾನ್ಯ ಮಾಡಿದ ಏಕಸದಸ್ಯ ಪೀಠ, ದಸರಾ ರಜೆಯ ಬಳಿಕ ಅಕ್ಟೋಬರ್ 26 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು.
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 1 ರಂದು ಬಂಧಿಸಿದ್ದು, ಒಂದು ವರ್ಷದಿಂದ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
Advertisement