ಎಲೆಕ್ಟ್ರಾನಿಕ್ ಸಿಟಿಗೆ ತುಷಾರ್ ಗಿರಿನಾಥ್ ಭೇಟಿ: ಮತದಾನಕ್ಕೆ ವೇತನ ಸಹಿತ ರಜೆ ಇದೆ, ತಪ್ಪದೇ ಮತದಾನ ಮಾಡುವಂತೆ ಮನವಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಗುರುವಾರ ಎಲೆಕ್ಟ್ರಾನಿಕ್ಸ್ ಸಿಟಿಗೆ ಬೇಟಿ ನೀಡಿದ್ದು, ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಐಟಿ ಕಾರಿಡಾರ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೇವಲ ಶೇ.52ರಷ್ಟು ಮತದಾನವಾಗಿತ್ತು. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತುಷಾರ್ ಗಿರಿನಾಥ್ ಅವರು, ಮತದಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಇದರಂತೆ ಟೆಕ್ ಮಹೀಂದ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಐಟಿ-ಬಿಟಿ ಸಂಸ್ಥೆಯ ಉದ್ಯೋಗಿಗಳಿಗೆ ಮತದಾನ ಮಾಡುವ ಒಲವು ಹೆಚ್ಚಾಗಿಲ್ಲ. ಹಾಗಾಗಿ ತಪ್ಪು ಕಲ್ಪನೆ ಬಿಟ್ಟು ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.
ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಮೇ 10 ರಂದು ವೇತನ ಸಹಿತ ರಜೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಬಳಿಕ ಎಲೆಕ್ಟ್ರಾನಿಕ್ಸ್ ಸಿಟಿಯ ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ಗೆ ಭೇಟಿ ನೀಡಿ ಸುಮಾರು 2,000 ಗಾರ್ಮೆಂಟ್ ವಲಯದ ಕಾರ್ಮಿಕರಿಗೆ ಮತ ಹಾಕುವಂತೆ ಮನವಿ ಮಾಡಿದರು.
ಈ ವೇಳೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ, ಸಂಗಪ್ಪ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಂಟಿ ಆಯುಕ್ತ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ