ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
‘ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕಾರಣ 50 ದಿನಗಳ ಕಾಲ ಧಾರವಾಡ ಜಿಲ್ಲೆಯಲ್ಲಿ ಇರಲು ಅನುಮತಿ ನೀಡಬೇಕು’ ಎಂದು ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದ 15ನೇ ಆರೋಪಿಯಾಗಿರುವ ವಿನಯ ಕುಲಕರ್ಣಿ ಸಲ್ಲಿಸಿರುವ ಎರಡು ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ಎಚ್ ಜಾಧವ್, ‘ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಅರ್ಜಿದಾರರಿಗೆ, ಧಾರವಾಡ ಪ್ರವೇಶಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದೆ. ಆದರೆ, ಸದ್ಯ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ 50 ದಿನ ಧಾರವಾಡದಲ್ಲಿ ಇರಲು ಅನುಮತಿ ನೀಡುವಂತೆ ಅರ್ಜಿದಾರರು ಕೋರಿದ್ದ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ’ ಎಂದು ವಿವರಿಸಿದರು.
ಇಂದು ವಿಚಾರಣೆ
ಇನ್ನು ಕರ್ನಾಟಕ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಏ.21 ಅಂದರೆ ಶುಕ್ರವಾರಕ್ಕೆ ಮುಂದೂಡಿದ್ದು, ಇಂದು ಪೀಠದಲ್ಲಿ ಮಹತ್ತರ ವಿಚಾರಣೆ ನಡೆಯುವ ಸಾಧ್ಯತೆ ಇದೆ.
Advertisement