ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ

ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 
ಸಿದ್ದರಾಮಯ್ಯ- ಯಡಿಯೂರಪ್ಪ
ಸಿದ್ದರಾಮಯ್ಯ- ಯಡಿಯೂರಪ್ಪ

ಬೆಂಗಳೂರು: ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಸರಣೀ ಟ್ವೀಟ್ ಗಳ ಮೂಲಕ ಬಿಜೆಪಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಲಿಂಗಾಯತ ಸಮುದಾಯದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ನೋಡಿದಾಗ ‘ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ…” ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ ಎಂದು ಹೇಳಿದ್ದಾರೆ. 

ಲಿಂಗಾಯತ ಸಮುದಾಯದ ವಿರುದ್ಧ ರಾಜ್ಯದಲ್ಲಿರುವ ಬಿಜೆಪಿ ನಾಯಕರೇ ಕೆಲಸ ಮಾಡುತ್ತಿರುವುದನ್ನು ಸಮುದಾಯ ಅದನ್ನು ಅರ್ಧ ಮಾಡಿಕೊಳ್ಳದೇ ಇರುವುದು ವಿಷಾದನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್.ಎಸ್.ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ 
ಬಿಜೆಪಿ ಪಕ್ಷದ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿ ಪಕ್ಷವನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು, ಜಗದೀಶ್ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು, ಕಾಂಗ್ರೆಸ್ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ಸೋಮಣ್ಣ ಅವರ ಬಗ್ಗೆಯೂ ಬರೆದಿರುವ, ಸಿದ್ದರಾಮಯ್ಯ, "ಒಲ್ಲೆನೆಂದರೂ ಬಲತ್ಕಾರವಾಗಿ ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಮತ್ತು ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಆರ್.ಎಸ್.ಎಸ್ ನ ‘ವಿಘ್ನ ಸಂತೋಷಿ’ಗಳು ಎಂದು ಆರೋಪಿಸಿದ್ದಾರೆ. 

ಇನ್ನು ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಈಗ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಈ ದಾಯಾದಿಗಳ ಕಾದಾಟದಲ್ಲಿ ಯಾರು ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

"ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್.ಎಸ್.ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಬದಲಾವಣೆಯ ಹೆಸರಲ್ಲಿ ಬಿಜೆಪಿ ಪಕ್ಷದೊಳಗಿನ ಆರ್.ಎಸ್.ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ. ಈಗಲೂ ಕಾಲ ಮಿಂಚಿಲ್ಲ, ಬಿಜೆಪಿ ಪಕ್ಷದೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ, ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕು, ಲಿಂಗಾಯತ-ವೀರಶೈವ ಸಮುದಾಯ ಕೂಡಾ ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com