ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಶೌಚಾಲಯಕ್ಕೆ ತೆರಳಿದ್ದಾಗ ಸಹಪಾಠಿಗಳು ವಿಡಿಯೊ ಚಿತ್ರೀಕರಣ ಮಾಡಿ ಸುದ್ದಿಯಾಗಿರುವ ಪ್ರಕರಣದ ಬಗ್ಗೆ ಪೊಲೀಸರು ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ, ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಕೂಡ ಬಂದು ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಉಡುಪಿ ಜಿಲ್ಲೆ ಪ್ರವಾಸ ನಡೆಸಲಿರುವ ಸಿಎಂ ಸಿದ್ದರಾಮಯ್ಯನವರು ಬೆಳಗ್ಗೆ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೊಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಎಫ್ಐಆರ್ ಆಗಿದೆ.
ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ನಡೆಸುತ್ತಿದ್ದು, ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಅವರು ಬಂದು ಪರಿಶೀಲನೆ ಮಾಡಿ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದು ಹೇಳಿದ್ದಾರೆ.ತನಿಖೆಯಾಗಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಕ್ಕಳಾಟಿಕೆಯಾದರೆ ಕೇಸು ಹೇಗೆ ದಾಖಲಾಗುತ್ತದೆ?: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಜೊತೆ ಸೇರಿ ಮಕ್ಕಳಾಟವೆಂದು ಈ ರೀತಿ ವಿಡಿಯೊ ಚಿತ್ರೀಕರಣ ಮಾಡಿದ್ದರೆ ಕೇಸು ಹೇಗೆ ದಾಖಲಾಗುತ್ತದೆ, ಗೃಹ ಸಚಿವ ಪರಮೇಶ್ವರ್ ಅವರು ಕಾಲೇಜಿನಲ್ಲಿ ಮಕ್ಕಳು ತಮಾಷೆಗೆ ಈ ರೀತಿ ಮಾಡಿರಬಹುದು ಎಂದು ಹೇಳಿರಬಹುದು. ಆದರೆ ಕೇಸು ದಾಖಲಾಗಿದೆ. ಎಫ್ಐಆರ್ ನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ, ತನಿಖೆ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿದರು.
ಮಳೆ, ಹಾನಿ ಬಗ್ಗೆ ಪರಿಶೀಲನೆ: ಈ ಬಾರಿ ಬಜೆಟ್ ನಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ಪ್ರಕಟಿಸಿದ್ದೇವೆ. ಜುಲೈ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಜೂನ್ ತಿಂಗಳಲ್ಲಿ ಅಷ್ಟೊಂದು ಬಂದಿರಲಿಲ್ಲ. ಮಳೆ ಹೆಚ್ಚು ಬಿದ್ದ ಪ್ರದೇಶಗಳಲ್ಲಿ ಏನಾಗಿದೆ ಎಂದು ತಿಳಿಯಲು ಮತ್ತು ಪರಿಶೀಲನೆ ಸಭೆ ನಡೆಸಲು ಇಂದು ಬಂದಿದ್ದೇನೆ ಎಂದರು.
Advertisement