ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದ್ದು, ಸಮಾಜದ ಹಿತಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕರೆ ನೀಡಿದರು.
ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌.
ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌.
Updated on

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದ್ದು, ಸಮಾಜದ ಹಿತಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕರೆ ನೀಡಿದರು.

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ, ಅವುಗಳನ್ನು ಜಾರಿಗೊಳಿಸುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಾರೆ. ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಈ ಅಧಿಕಾರಿಗಳು ಕೆಲಸ ಮಾಡುತ್ತಾರೆಂದು ಹೇಳಿದರು.

ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು.

ಅಧಿಕಾರಿಗಳು ಜನರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಭ್ರಷ್ಟಾಚಾರ, ಜಾತಿ, ಧರ್ಮ, ರಾಜಕೀಯ ಮಾಡಬಾರದು. ಧರ್ಮ ಮತ್ತು ಆಡಳಿತದ ನಡುವೆ ಯಾವುದೇ ಸಂಬಂಧವಿಲ್ಲ, ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು.

ಸರ್ಕಾರ ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನಾಲ್ಕನೇ ಗ್ಯಾರಂಟಿ ಆಗಸ್ಟ್ 20 ರಂದು ಮತ್ತು ಐದನೇ ಗ್ಯಾರಂಟಿಯನ್ನು ಡಿಸೆಂಬರ್ ಅಥವಾ 2024 ರ ಜನವರಿಯಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಕೆಎಎಸ್ ಅಧಿಕಾರಿಗಳ ಬೇಡಿಕೆಗಳನ್ನು ಪರಿಶೀಲಿಸಿ, ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಅಧಿಕಾರಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಿ ಸರಕಾರದೊಂದಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com