ಬೆಂಗಳೂರಿನಲ್ಲಿ 24 ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸ: ಎನ್ ಐಎ ಶೋಧ ಕಾರ್ಯಾಚರಣೆಯಲ್ಲಿ ಪತ್ತೆ
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ 24 ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿದ್ದು, ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ.
ನಗರದ ಬೆಳ್ಳಂದೂರಿನಲ್ಲಿ ಸೋಮವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಮೂವರು ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್ ಮತ್ತು ಮೊಹಮ್ಮದ್ ಜಹೀದ್ ಅವರನ್ನು ಎನ್ಐಎ ಪತ್ತೆ ಹಚ್ಚಿದೆ. ಪ್ರಸ್ತುತ ಬೆಳ್ಳಂದೂರು ಪೊಲೀಸರ ವಶದಲ್ಲಿರುವ ವಲಸಿಗರು 2011 ರಿಂದ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ವಲಸಿಗರು 20,000 ರೂಪಾಯಿ ಕೊಟ್ಟು ಮಧ್ಯವರ್ತಿಗಳ ಸಹಾಯದಿಂದ ದೇಶ ಪ್ರವೇಶಿಸಿದ್ದಾರೆ. ಅಲ್ಲದೇ ಅಕ್ರಮ ವಲಸಿಗರು ಆಧಾರ್ ಕಾರ್ಡ್ಗಳು, ಪಡಿತರ ಚೀಟಿಗಳು ಮತ್ತು ಇತರ ಸರ್ಕಾರಿ ಗುರುತಿನ ಚೀಟಿಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸರು ವಿದೇಶಿಯರ ಕಾಯ್ದೆ ಸೆಕ್ಷನ್ 14 (ಸಿ), 14 (ಎ) ಮತ್ತು ಪಾಸ್ಪೋರ್ಟ್ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ