ವಿಜಯಪುರದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಎಂ.ಬಿ.ಪಾಟೀಲ್.
ವಿಜಯಪುರದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಎಂ.ಬಿ.ಪಾಟೀಲ್.

ರಾಜ್ಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರ ಮುಂದು!

ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಗಳನ್ನು ನಿರ್ವಹಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮಾದರಿಯಲ್ಲಿ ತನ್ನದೇ ಆದ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ವಿಜಯಪುರ: ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಗಳನ್ನು ನಿರ್ವಹಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮಾದರಿಯಲ್ಲಿ ತನ್ನದೇ ಆದ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
    
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು, ಕಾರ್ಯಾಚರಣೆಗಾಗಿ ವಿಮಾನ ನಿಲ್ದಾಣಗಳನ್ನು ಎಎಐಗೆ ಹಸ್ತಾಂತರಿಸುವುದರಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಹೀಗಾಗಿ ರಾಜ್ಯದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಥಾಪನೆ ಕುರಿತು ಚಿಂತನೆಗಳ ನಡೆಸಲಾಗುತ್ತಿದೆ. ಈ ಕುರಿತ ಕಾರ್ಯಸಾಧ್ಯತೆಯನ್ನು ಮೌಲ್ಯಮಾಪನ ಮಾಡಲಾಗುವುದು ಎಂದು ಹೇಳಿದರು.

ವಿಮಾನ ನಿಲ್ದಾಣಗಳನ್ನು ಸ್ವಂತವಾಗಿ ನಿರ್ವಹಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ರಾಜ್ಯ ಸರ್ಕಾರವು ವಿಮಾನ ನಿಲ್ದಾಣಗಳಿಗೆ ಹಣ ನೀಡುತ್ತಿದೆ. ಹೀಗಿರುವಾಗ ಎಎಐ ಅವುಗಳನ್ನು ಏಕೆ ನಿರ್ವಹಿಸಬೇಕು. ಇದಲ್ಲದೆ, ಕಾರ್ಯಾಚರಣೆಯ ಶುಲ್ಕವನ್ನು ರಾಜ್ಯವೇ ಭರಿಸಬೇಕಾಗುತ್ತದೆ. ಇದರ ಬದಲಿಗೆ ವಿಜಯಪುರ, ಶಿವಮೊಗ್ಗ, ರಾಯಚೂರು ಮತ್ತು ಬಳ್ಳಾರಿಯಲ್ಲಿ ಬರುವ ವಿಮಾನ ನಿಲ್ದಾಣಗಳನ್ನು ಸರ್ಕಾರ ಸ್ವಂತವಾಗಿ ನಿರ್ವಹಿಸಬಹುದು ಎಂದು ತಿಳಿಸಿದರು.

ಈ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಅದರ ಸಾಧಕ-ಬಾಧಕ, ಕಾರ್ಯಸಾಧ್ಯತೆ, ಕಾನೂನು ತೊಡಕುಗಳ ಬಗ್ಗೆ ವಿವರವಾದ ಮೌಲ್ಯಮಾಪನ ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆಯ ಒಂದು ಭಾಗವನ್ನು ಜವಾಬ್ದಾರಿಯನ್ನು ಅದಾನಿ ಸಮೂಹಕ್ಕೆ ನೀಡಿದ್ದರ ಕುರಿತಂತೆಯೂೂ ಪ್ರಶ್ನೆ ಮಾಡಿದ್ದಾರೆ.

“ರಾಜ್ಯ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎಎಐಗೆ ಹಸ್ತಾಂತರಿಸಿದೆ. ಆದರೆ, ಎಎಐ ಅದಾನಿಗೆ ನೀಡಿದೆ ಅದಾನಿಗೆ ನೀಡುವುದರ ಬದಲಿಗೆ ಸರ್ಕಾರಕ್ಕೆ ನೇರವಾಗಿ ನೀಡಬಹುದಿತ್ತು ಎಂದು ಹೇಳಿದ್ದಾರೆ.

ಎಎಐನ ಈ ನಿರ್ಧಾರದಿಂದ ಅಸಮಾಧಾನವಾಗಿದೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎಎಐಗೆ ನೀಡಿರುವ ನಿಯಮಗಳು ಮತ್ತು ಷರತ್ತುಗಳನ್ನು ಅಧ್ಯಯನ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಹುರಾಷ್ಟ್ರೀಯ ಕಂಪನಿಗಳಾದ ಫಾಕ್ಸ್‌ಕಾನ್, ಐಬಿಸಿ, ಮಾರುಬೇನಿ ಮುಂತಾದವುಗಳೊಂದಿಗೆ ಕರ್ನಾಟಕದಲ್ಲಿ ಲಕ್ಷಾಂತರ ಡಾಲರ್ ಮೌಲ್ಯದ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪಾಟೀಲ್ ಆವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com