ಕಲಬುರಗಿ: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಪ್ರಕರಣ ಸಿಐಡಿ ತನಿಖೆಗೆ!
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ
Published: 18th August 2023 02:17 PM | Last Updated: 18th August 2023 02:17 PM | A+A A-

ಸಂಗ್ರಹ ಚಿತ್ರ
ಕಲಬುರಗಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ
ಕಲಬುರಗಿ ಸಮೀಪದ ಶರಣಸಿರಸಗಿ ಮಡ್ಡಿ ಗ್ರಾಮದ ನಿವಾಸಿ ಉದಯಕುಮಾರ್ (52) ಗುರುವಾರ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದ.
ಠಾಣೆಗೆ ಕರೆತರುವ ಮೊದಲೇ ಆರೋಪಿಗೆ ತೀವ್ರ ಹೃದಯಾಘಾತವಾಗಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಲಬುರಗಿ ಪೊಲೀಸ್ ಆಯುಕ್ತ ಆರ್ ಚೇತನ್ ಅವರು, ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಪೊಲೀಸರ ಕಸ್ಟಡಿಯಲ್ಲಿದ್ದ 23 ವರ್ಷದ ಆರೋಪಿ ಲಾಕಪ್ ಡೆತ್; ಪ್ರಕರಣ ಸಿಐಡಿ ತನಿಖೆಗೆ!
ಈ ನಡುವೆ ಮೃತ ವ್ಯಕ್ತಿಯ ಕುಟುಂಬಸ್ಥರು, ಗ್ರಾಮಸ್ಥರು ಮಿನಿ ವಿಧಾನಸೌಧದ ಬಳಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಎಸ್ಪಿ ಮುಖಂಡ ಸೂರ್ಯಕಾಂತ್ ನಿಂಬಾಳ್ಕರ್ ಮಾತನಾಡಿ, ಶವಾಗಾರದಲ್ಲಿ ಮೃತನ ಕೈಗಳಿಗೆ ಹೊಡೆದ ಗುರುತುಗಳು ಪತ್ತೆಯಾಗಿವೆ. ಪೊಲೀಸರು ಕಸ್ಟಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಉದಯಕುಮಾರ್ ಅವರಿಗೆ ಹೃದಯ ಸಂಬಂಧಿ ಖಾಯಿಲೆಗಳಿರಲಿಲ್ಲ. ಅವರಿಗೆ ಅಪರಾಧದ ಹಿನ್ನೆಲೆ ಇರಲಿಲ್ಲ. ಪಾರ್ಡಿ ಸಮುದಾಯಕ್ಕೆ ಸೇರಿದವರೆಂದು ತಿಳಿದ ಹಿನ್ನೆಲೆಯಲ್ಲಿ ಉದಯಕುಮಾರ್ ಅವರನ್ನು ಠಾಣೆಗೆ ಕರೆದೊಯ್ದು ಕಿರುಕುಳ ನೀಡಿದ್ದಾರೆ ಎಂದು ಹೇಳಿದ್ದಾರೆ.
ಉದಯ್ ಕುಮಾರ್ ಅವರ ಸಾವಿಗೆ ಕಾರಣರಾದ ಅಶೋಕ್ ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ನಾಲ್ವರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ, ಉದಯ್ ಕುಮಾರ್ ಅವರ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.