ಬೆಂಗಳೂರು: ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್'ದೆ ಮೇಲ್ಮನವಿ ಸಲ್ಲಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ಶನಿವಾರ ಸಂಜೆ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡ್ವೊಕೇಟ್ ಜನರಲ್ ಹಾಗೂ ಸಚಿವರ ಅಭಿಪ್ರಾಯದಂತೆ ಸೋಮವಾರ ಸುಪ್ರೀಂಕೋರ್ಚ್ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮಳೆ ಅಭಾವದ ಹಿನ್ನೆಲೆಯಲ್ಲಿ ಕಾವೇರಿನಲ್ಲಿ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದೆ. ರಾಜ್ಯಕ್ಕೆ ಕುಡಿಯುವ ಅಗತ್ಯಕ್ಕೂ ನೀರಿಲ್ಲದಂತಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಪ್ರತಿನಿಧಿಗಳು ವಾದಿಸಿದ್ದರೂ ಕಾವೇರಿ ನಿರ್ವಹಣಾ ಪ್ರಾಧಿಕಾರವು ನಿತ್ಯ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿದೆ. ಇದರಂತೆ ರಾಜ್ಯ ಸರ್ಕಾರ ಸ್ವಲ್ಪ ನೀರನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ರೈತರು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಕರೆಸಿಕೊಂಡು ವಿಸ್ತೃತ ಚರ್ಚೆ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಸೇರಿದಂತೆ ಹಿರಿಯ ಸಚಿವರು ಮೇಲ್ಮನವಿ ಹೋಗಬೇಕಾದ ಅನಿವಾರ್ಯತೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಪ್ರಾಧಿಕಾರದ ಸೂಚನೆಯಂತೆ ನೀರು ಬಿಡುಗಡೆ ಮಾಡಿದರೆ ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗಲಿದೆ. ಆದ್ದರಿಂದ ರಾಜ್ಯದಲ್ಲಿನ ಮಳೆ ಅಭಾವ, ಕುಡಿಯುವ ನೀರಿನ ಅಗತ್ಯ ಹಾಗೂ ತಮಿಳುನಾಡಿನ ಜಲಾಶಯಗಳ ನೀರಿನ ಮಟ್ಟದ ಆಧಾರದ ಮೇಲೆ ಪ್ರಾಧಿಕಾರ ನೀಡಿರುವ ಆದೇಶ ರದ್ದುಪಡಿಸುವಂತೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕಾವೇರಿ ವಿವಾದ ಸಂಬಂಧ ಪ್ರತಿಪಕ್ಷಗಳ ಪ್ರತಿಭಟನೆ ಪ್ರಮುಖವಾಗಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿದ್ದಾರೆ. ಇದನ್ನು ಅಧಿಕೃತವಾಗಿಯೂ ಪ್ರಕಟಿಸಿದ್ದಾರೆ. ಹೀಗಾಗಿ ಯಾರೂ ಯಾವುದೇ ಪ್ರತಿಭಟನೆ, ಹೋರಾಟ ಮಾಡುವ ಅಗತ್ಯವಿಲ್ಲ. ಎಲ್ಲರೂ ಒಂದು ಕಡೆ ಸೇರಿ ರಾಜ್ಯದ ಹಿತದೃಷ್ಟಿಯಿಂದ ಚರ್ಚಿಸಲು ಅವಕಾಶವಿದೆ ಎಂದರು.
ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕಿಡಿಕಾರಿದ್ದು, ರೈತರ ಹಿತವನ್ನು ಕಡೆಗಣಿಸಿ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ಕಿಡಿಕಾರಿದ್ದಾರೆ.
Advertisement