ಮಂಡ್ಯ: ಬಾಕಿ ಹಣ, ತಮಿಳುನಾಡಿಗೆ ನೀರು ಬಿಡುಗಡೆ ವಿರುದ್ಧ ಕಬ್ಬು ಬೆಳೆಗಾರರ ಪ್ರತಿಭಟನೆ
ಮೈಸೂರು: ಆಗಸ್ಟ್ 30 ರಂದು ನಡೆಯಲಿರುವ ಸಭೆಯಲ್ಲಿ ರಾಜ್ಯ ಸರ್ಕಾರವು ತಮ್ಮ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದ್ದೇ ಆದರೆ, ರಾಜ್ಯಾದ್ಯಂತ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಎಚ್ಚರಿಕೆಯನ್ನು ನೀಡಿದೆ.
ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ `150 ಹೆಚ್ಚುವರಿ ಮೊತ್ತ ಪಾವತಿಸಿಲ್ಲ. ಜಿಲ್ಲಾ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಮುಷ್ಕರ ನಿರತ ರೈತರೊಂದಿಗೆ ಸಭೆ ನಡೆಸಿ ಹಣ ಪಾವತಿಸುವಂತೆ ಕಾರ್ಖಾನೆಗಳಿಗೆ ಒಂದು ವಾರದ ಗಡುವು ನೀಡಿದ್ದಾರೆ. ಆದರೆ, ಸಚಿವರು ಆ.30ರಂದು ಸಭೆ ನಡೆಸಲಿದ್ದಾರೆ ಎಂದು ಆಯುಕ್ತರು ಸಂಘಕ್ಕೆ ಪತ್ರ ಬರೆದಿದ್ದಾರೆ. ಒಂದು ವೇಳೆ ಕಾರ್ಖಾನೆಗಳು ಬಾಕಿ ಹಣ ಪಾವತಿಸಲು ವಿಫಲವಾಗಿದ್ದೇ ಆದರೆ, ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ಇದೇ ವೇಳೆ ನೀರಾವರಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಪೂರೈಕೆ ನಿಲ್ಲಿಸಿ, ಮೀಟರ್ ಫಿಕ್ಸ್ ಮಾಡಿ ರೈತರಿಗೆ ವಿದ್ಯುತ್ ಬಳಕೆ ಮಾಡಲು ರಾಜ್ಯ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ. ಹೀಗಾಗಿ ರೈತರು ಆಧಾರ್ ಕಾರ್ಡ್ ನೀಡದಂತೆ ಮನವಿ ಮಾಡಿಕೊಂಡರು.
ಐಪಿ ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಯೋಜನೆಗಳ ವಿರುದ್ಧ ಪ್ರತಿಭಟಿಸಲು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮೆಗಾ ರ್ಯಾಲಿಯನ್ನು ನಡೆಸುತ್ತೇವೆಂದು ಹೇಳಿದರು.
ರೈತ ಸಮುದಾಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ವಿಶ್ವ ವ್ಯಾಪಾರ ಸಂಸ್ಥೆಯ ಒಪ್ಪಂದದಿಂದ ಹೊರನಡೆಯಬೇಕು. ಆಮದು ಸುಂಕವನ್ನು ಶೇ 40 ರಷ್ಟು ಕಡಿತಗೊಳಿಸಿರುವುದು ಕೊಬ್ಬರಿ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಮಹಿಳೆಯರಿಗೆ ಗ್ಯಾರಂಟಿ ಯೋಜನೆ ನೀಡಿರುವ ರಾಜ್ಯ ಸರ್ಕಾರ, ಅವರ ಸಬಲೀಕರಣಕ್ಕೆ ಪೂರಕವಾಗಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಬಳಿಕ ಕಬಿನಿ ಹಾಗೂ ಕೆಆರ್ಎಸ್ನಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದ ರೈತರಿಗೆ ದ್ರೋಹ ಬಗೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರೈತರಿಂದ ಘೇರಾವ್ ಮಾಡಲಾಗುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ