ಅಗ್ನಿ ಅವಘಡ ಪ್ರಕರಣ: ಬಿಬಿಎಂಪಿ ಮುಖ್ಯ ಎಂಜನೀಯರ್ ಸ್ಥಿತಿ ಗಂಭೀರ- ಡಿ.ಕೆ ಶಿವಕುಮಾರ್
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಬಿಬಿಎಂಪಿ ಚೀಫ್ ಇಂಜಿನಿಯರ್ ಶಿವಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದ ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಶಿವಕುಮಾರ್ ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದರು.
ಆ.11ರಂದು ಬಿಬಿಎಂಪಿ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡು ಪಾಲಿಕೆ ಅಧಿಕಾರಿ ಹಾಗೂ ಎಂಟು ಸಿಬ್ಬಂದಿ ಗಾಯಗೊಂಡಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಬಿಬಿಎಂಪಿ ಮುಖ್ಯ ಎಂಜಿನಿಯರ್ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದರು.
ಜ್ಯೋತಿ ಅವರ ಸ್ಥಿತಿ ಸ್ವಲ್ಪ ಸುಧಾರಿಸಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ಗಾಯಾಳುಗಳಲ್ಲಿ ವಿಜಯಮಾಲಾ ಮತ್ತು ಶ್ರೀನಿವಾಸ್ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಸಚಿವ ಶಿವಕುಮಾರ್ ತಿಳಿಸಿದರು. ಮನೋಜ್, ಸಿರಾಜ್, ಶ್ರೀಧರ್ ಮತ್ತು ಸಂತೋಷ್ ಕುಮಾರ್ ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಗ್ನಿ ಅವಘಡದ ತನಿಖೆಯ ಸ್ಥಿತಿಗತಿ ಕುರಿತು ಕೇಳಿದ ಪ್ರಶ್ನೆಗೆ, ತನಿಖಾ ವರದಿ ಬರಲಿ. ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಲಿ, ನಂತರ ನಾನು ಮಾತನಾಡುತ್ತೇನೆ ಎಂದು ಶಿವಕುಮಾರ್ ಮಾಹಿತಿ ನೀಡಿದರು.
ಏತನ್ಮಧ್ಯೆ, ಮಾಧ್ಯಮ ಚಾನೆಲ್ಗಳು ಮುಖ್ಯ ಎಂಜಿನಿಯರ್ ಸಾವಿನ ವದಂತಿಗಳನ್ನು ಪ್ರಸಾರ ಮಾಡಲು ಪ್ರಾರಂಭಿಸಿದ ನಂತರ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಂತಹ ಸುದ್ದಿಗಳನ್ನು ಹರಡಬಾರದು ಎಂದು ಮನವಿ ಮಾಡಿದರು. ಪಾಲಿಕೆ ಮಾತ್ರ ರೋಗಿಗಳ ಆರೋಗ್ಯ ಸ್ಥಿತಿ ಕುರಿತು ಅಧಿಕೃತ ಮಾಹಿತಿ ನೀಡಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ