ಮಡಿಕೇರಿ: ನಗರದ ಅರಣ್ಯ ಇಲಾಖೆ ವಸತಿಗೃಹದಲ್ಲಿ ಮಡಿಕೇರಿ ವಿಭಾಗದ ಅರಣ್ಯ ಇಲಾಖೆಯ 27 ವರ್ಷದ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಮಂಡ್ಯ ಜಿಲ್ಲೆಯ ಜಿಸಿ ರಶ್ಮಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಎರಡು ವರ್ಷಗಳ ಹಿಂದೆ ಮಡಿಕೇರಿ ವಿಭಾಗದ ಅರಣ್ಯ ಇಲಾಖೆಯ ಡಿಆರ್ಎಫ್ಒ ಆಗಿ ರಶ್ಮಿ ಅವರನ್ನು ನಿಯೋಜಿಸಲಾಗಿತ್ತು. ಇವರು ಮಂಡ್ಯ ಜಿಲ್ಲೆಯ ಮಂಗಳ ಗ್ರಾಮದವರಾಗಿದ್ದು, ಅವರ ತಾಯಿ ಮೈಸೂರಿನವರು.
ಸಂತ್ರಸ್ತೆ ಮಡಿಕೇರಿಯ ಅರಣ್ಯ ಇಲಾಖೆಯ ಕ್ವಾರ್ಟರ್ಸ್ನಲ್ಲಿ ಒಬ್ಬರೇ ವಾಸವಿದ್ದರು. ಮಂಗಳವಾರ ರಾತ್ರಿ ಆಕೆಯ ಸ್ನೇಹಿತೆ ಎನ್ನಲಾದ ಮಡಿಕೇರಿ ವಿಭಾಗದ ಆರ್ಎಫ್ಒಗೆ ಕರೆ ಮಾಡಿದ್ದರು ಎನ್ನಲಾಗಿದೆ. ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆರ್ಎಫ್ಒಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಸುದ್ದಿ ತಿಳಿದ ಆರ್ಎಫ್ಒ, ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಮುನ್ನವೇ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 174(3)ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಸಾವಿನ ಹಿಂದಿನ ಕಾರಣ ಏನೆಂಬುದನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಕರೆ ದಾಖಲೆಗಳು ಮತ್ತು ಇತರ ವಿವರಗಳನ್ನು ಪತ್ತೆಹಚ್ಚಲಾಗುತ್ತಿದ್ದು, ಅನುಮಾನಾಸ್ಪದ ಸಾವು ಎಂದು ಪ್ರಕರಣವನ್ನು ದಾಖಲಿಸಿರುವುದಾಗಿ ಮೂಲಗಳು ತಿಳಿಸಿವೆ.
Advertisement