ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು, ಈಗ ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ: ವೈದ್ಯರ ಮಾಹಿತಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡುತ್ತಿರುವ ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಅವರು, ಕುಮಾರಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ.
ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿತು.
"ಗೋಲ್ಡನ್ ಅವರ್" ಒಳಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕುಮಾರಸ್ವಾಮಿಯವರಿಗೆ ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆ ನೀಡಲಾಗಿತ್ತು. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆತಂಕ ಪಡುವ ಅಗತ್ಯವಿಲ್ಲ: ಪತ್ನಿ ಅನಿತಾ ಕುಮಾರಸ್ವಾಮಿ
ಆಸ್ಪತ್ರೆದೆ ದಾಖಲಿಸಿಕ ಕೂಡಲೇ ವೈದ್ಯರು ಎಂಆರ್ಐ ಮತ್ತು ಸಿಟಿ ಸ್ಕ್ಯಾನ್ ಮಾಡಿ, ಚಿಕಿತ್ಸೆ ಆರಂಭಿಸಿದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಹೇಳಿದ್ದಾರೆ.
ನೆಗಡಿ, ಮೈ ನೋವು, ಜ್ವರದಿಂದ ಬಳಳುತ್ತಿದ್ದಾರೆ. ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಹೇಳಿದ್ದಾರೆ. ಪ್ಯಾನಿಕ್ ಆಗಲು ಯಾವುದೇ ಕಾರಣವಿಲ್ಲ. ಜನರು ವದಂತಿಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿಯವರು ಎರಡು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಲ್ಲದೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ನಡುವೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರು, ಕುಮಾರಸ್ವಾಮಿಯವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ