ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಇಂಜಿನಿಯರ್ ಸಾವು, ಡಿಕೆ ಶಿವಕುಮಾರ್ ಸಂತಾಪ

ಬಿಬಿಎಂಪಿಯ ಗುಣ ನಿಯಂತ್ರಣ ಲ್ಯಾಬ್'ನ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಮೃತಪಟ್ಟಿದ್ದು, ಶಿವಕುಮಾರ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಿದಡಿ.ಕೆ ಶಿವಕುಮಾರ್.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಿದಡಿ.ಕೆ ಶಿವಕುಮಾರ್.
Updated on

ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ಲ್ಯಾಬ್'ನ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಜಿನಿಯರ್ ಶಿವಕುಮಾರ್ ಅವರು ಬುಧವಾರ ಮೃತಪಟ್ಟಿದ್ದು, ಶಿವಕುಮಾರ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ. ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಈ ನಡುವೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೂ ಕೂಡ ಸಂತಾಪ ಸೂಚಿಸಿದ್ದಾರೆ.

ಪಾಲಿಕೆಯ ಹಲವು ವಿಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಶಿವಕುಮಾರ್ ಅವರು ಕಿರಿಯ ವಯಸ್ಸಿನಲ್ಲೇ ವಿಧಿವಶರಾಗಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕುಟುಂಬ ಸದಸ್ಯರು, ಬಂಧು-ಮಿತ್ರರಿಗೆ ಕರುಣಿಸಲೆಂದು ಕೋರುತ್ತೇವೆಂದು ಹೇಳಿದ್ದಾರೆ.

ಅಲ್ಲದೆ, ಶಿವಕುಮಾರ್ ಕುಟುಂಬಕ್ಕೆ ಬಿಬಿಎಂಪಿಯಿಂದ ರೂ.10 ಲಕ್ಷ ಪರಿಹಾರ ಹಾಗೂ ಮೃತರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಂಪಿ ಕೇಂದ್ರ ಕಚೇರಿ ಆವರಣದಲ್ಲಿ ಕಳೆದ ಆಗಸ್ಟ್ 11 ರಂದು ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿ, ಒಟ್ಟು 9 ಮಂದಿ ಗಾಯಗೊಂಡಿದ್ದರು. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಬಿಬಿಎಂಪಿ ಚಿಕಿತ್ಸೆ ಕೊಡಿಸುತ್ತಿತ್ತು. ಶಿವಕುಮಾರ್ ಅವರಿಗೆ ವಿಷ ಅನಿಲ ಸೇವನೆಯಿಂದ ಉಸಿರಾಟದ ತೊಂದರೆ, ಶೇ.25ರಷ್ಟು ಸುಟ್ಟ ಗಾಯಗಳಾಗಿತ್ತು.

ಶಿವಕುಮಾರ್ ಅವರಿಗೆ ಆರಂಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಗರದ ಶೇಷಾದ್ರಿಪುರಂದ ಅಪೋಲೋ ಆಸ್ಪತ್ರೆಗೆ ಕಳೆದ ವಾರದ ಹಿಂದೆ ಶಿಫ್ಟ್ ಮಾಡಲಾಗಿತ್ತು. ಕಳೆದ ಸೋಮವಾರ ಮೆದುಳು ನಿಷ್ಕ್ರಿಯಗೊಂಡಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಬುಧವಾರ ಸಂಜೆ ಶಿವಕುಮಾರ್ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಶಿವಕುಮಾರ್ ಅವರು 16 ವರ್ಷಗಳಿಂದ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಅವರು ಪಾಲಿಕೆ ಬೃಹತ್ ನೀರುಗಾಲುವೆ ವಿಭಾಗದ ಅಧೀಕ್ಷಕ ಎಂಜಿನಿಯರ್ ಹಾಗೂ ಗುಣ ನಿಯಂತ್ರಣ ಲ್ಯಾಬ್'ನ ಪ್ರಭಾರಿ ಮುಖ್ಯ ಎಂಜಿನಿಯರ್ ಆಗಿದ್ದರು. ಅಪೋಲೋ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿವಕುಮಾರ್ ಮೃತದೇಹ ರವಾನಿಸಿ, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಂತರ ಕುಟುಂಬಸ್ಥರಿಕೆ ಮೃತದೇಹ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಿವಕುಮಾರ್ ಮೂಲತಃ ಮೈಸೂರು ಜಿಲ್ಲೆಯ ನಂಜನಗೂಡಿನ ಚಂದ್ರವಾಡಿ ಗ್ರಾಮದವರು. ಪತ್ನಿ ಉಮಾಮಹೇಶ್ವರಿ, ವಿಭಾ ನಿಧಿ ಶಿವಂ (12) ಮತ್ತು ನಿರ್ವಿ ನೇಹಾ ಶಿವಂ (10) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com