ವೈಟ್ ಟಾಪಿಂಗ್ ಗೆ ಹೆಚ್ಚಿನ ಆದ್ಯತೆ: ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆಗೆ ಚರ್ಚೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ಬೆಳಗಾವಿ: ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಸಚಿವರು, ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೊಂದಣಿಯಾಗುತ್ತಿವೆ. ವಾಹನಗಳ ಒತ್ತಡದಿಂದ ರಸ್ತೆಗಳು ಹಾಳಾಗುತ್ತಿದ್ದು, ರಸ್ತೆಗುಂಡಿ ಮುಚ್ಚುವುದೇ ದೊಡ್ಡ ಕೆಲಸವಾಗಿದೆ. ಹೀಗಾಗಿ ರಸ್ತೆಗುಂಡಿ ಮುಚ್ಚುವ ಕೆಲಸವನ್ನು ವಿಕೇಂದ್ರೀಕರಣ ಮಾಡಲಾಗಿದೆ ಎಂದರು. 

ಸಾರ್ವಜನಿಕರು ಅಥವಾ ಪೊಲೀಸ್ ಸಿಬ್ಬಂದಿ ಫೋಟೋ ತೆಗೆದು ಕಳುಹಿಸುವ ಗುಂಡಿಗಳನ್ನು ಪಾಲಿಕೆ ಅಧಿಕಾರಿಗಳು ಮುಚ್ಚಿಸುತ್ತಿದ್ದಾರೆ. ವೈಟ್ ಟಾಪಿಂಗ್ ಗೆ ರೂ. 1000 ಕೋಟಿ ಅನುದಾನವಿದ್ದು, ಮುಖ್ಯರಸ್ತೆಗಳಲ್ಲದೆ ಬೇರೆ ರಸ್ತೆಗಳನ್ನು ಮಾಡಬೇಕೆಂಬ ಬೇಡಿಕೆ ಇದೆ. ಬೆಂಗಳೂರಿನಲ್ಲಿ ಕೇಬಲ್ ಗಳ ಹಾವಳಿ ಹೆಚ್ಚಾಗಿದೆ. ಇದಕ್ಕಾಗಿ ರಸ್ತೆ ಅಗೆಯಲಾಗುತ್ತಿದೆ. ಹೀಗಾಗಿ ಯೋಜಿತ ರೂಪದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

25 ರಿಂದ 40 ವರ್ಷಗಳ ಕಾಲ ರಸ್ತೆಗಳು ಬಾಳಿಕೆ ಬರುವ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್ ಗೆ ಆದ್ಯತೆ ನೀಡಲಾಗಿದೆ. ಎಲ್ಲೆಲ್ಲಿಇದರ ಅಗತ್ಯವಿದೆ ಎಂಬುದರ ಚರ್ಚೆಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ಕರೆಯಲಿದ್ದೇನೆ. ಸರ್ಕಾರ ಎಷ್ಟೇ ಅನುದಾನ ನೀಡಿದರೂ ಪಾಲಿಕೆ ಹೆಚ್ಚಿನ ಆದಾಯ ಗಳಿಸುವ ಅಗತ್ಯವಿದೆ. ಇದಕ್ಕಾಗಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿದ್ದೇವೆ. ಆ ಮೂಲಕ ಪಾಲಿಕೆಗೆ ಆರ್ಥಿಕ ಶಕ್ತಿ ತುಂಬ ಕೆಲಸ ಮಾಡುತಿದ್ದೇವೆ. ಈ ಬಗ್ಗೆ ನಿಮ್ಮ ಬಳಿ ಸಲಹೆಗಳಿದ್ದರೆ ನೀಡಿ. ಬೆಂಗಳೂರಿನ ಗೌರವ, ಸ್ವಾಭಿಮಾನ ಉಳಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದರು.

ಅಪರಾಧ ತಡೆಗೆ ಗೃಹ ಇಲಾಖೆ ಸಹಯೋಗದಲ್ಲಿ ಕ್ರಮ:  ಬೆಂಗಳೂರಿನ ಸ್ವಚ್ಛತೆ, ಮೂಲಭೂತ ಸೌಕರ್ಯ ಅಭಿವೃದ್ಧಿ, ಅಪರಾಧ ತಡೆ ಹಾಗೂ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆ ಉಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಭಾರತಿ ಶೆಟ್ಟಿ ಅವರು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಡಿಕೆಶಿ, ಸ್ವಚ್ಛತೆ ವಿಚಾರದಲ್ಲಿ ಮಂಗಳೂರು, ಬೆಳಗಾವಿ ಬೆಂಗಳೂರಿಗಿಂತ ಉತ್ತಮವಾಗಿವೆ. ಜಯನಗರ, ಚಾಮರಾಜಪೇಟೆ, ಮಲ್ಲೇಶ್ವರಂ ಪ್ರದೇಶಗಳ ಹೊರತಾಗಿ ಬೆಂಗಳೂರು ಯೋಜಿತ ನಗರವಲ್ಲ. ಈಗ 1.40 ಕೋಟಿ ಜನಸಂಖ್ಯೆ ಇದೆ. ಕಸ ವಿಲೇವಾರಿಗೆ ಬೇರೆ ರಾಜ್ಯಗಳಲ್ಲಿ ಅಳವಡಿಸಿರುವ ವ್ಯವಸ್ಥೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ದೆಹಲಿ, ಹೈದರಾಬಾದ್ ನಲ್ಲಿ ಅಧ್ಯಯನ ಮಾಡಲಾಗಿದೆ. ಇಂಧೋರ್ ಗೆ ತೆರಳಬೇಕಿದೆ. ಈ ಬಗ್ಗೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರ ಸಲಹೆ ಪಡೆದಿದ್ದೇನೆ ಎಂದರು. 

ಬೆಂಗಳೂರಿನ ಸಂಚಾರ ಸಮಸ್ಯೆ ಬಗೆಹರಿಸಲು 9 ಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗಿದೆ. ಐದು ಪ್ರಮುಖ ರಸ್ತೆಗಳಿಂದ ನಗರದ ಒಳಗೆ ಸಂಚಾರಿ ದಟ್ಟಣೆ ಹೆಚ್ಚಾಗಿದೆ. ಇದಕ್ಕೆ ದೀರ್ಘಾವಧಿಯ ಯೋಜನೆ ಬೇಕಾಗಿದೆ. ಬೆಂಗಳೂರನ್ನು ಪ್ರವಾಸಿ ತಾಣ ಮಾಡಲು ಯೋಜನೆ ರೂಪಿಸಲಾಗಿಲ್ಲ. ವಿದೇಶಿ ಪ್ರವಾಸಿಗರಿಗೆ ವಿಧಾನಸೌಧ ಹಾಗೂ ಹೈಕೋರ್ಟ್ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲ. ಬಿಡಿಎ ಆಸ್ತಿ ಕುರಿತ ಪ್ರಕರಣಗಳ ಪರಿಶೀಲನೆಗೆ ಪ್ರತ್ಯೇಕ ವಿಭಾಗ ರೂಪಿಸಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಅಡ್ವೊಕೇಟ್ ಗಳಿಗೆ ಹೊಣೆಗರಿಕೆ ನಿಗದಿ ಮಾಡುತ್ತೇವೆ” ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com