ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ ಇಲಾಖೆಗಳಲ್ಲಿ ಅಧಿಕ

ಸರ್ಕಾರದ ಆಡಳಿತದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ತಿಳಿದುಬಂದಿದೆ.

ಮುಂದಿನ ಕೆಲವು ತಿಂಗಳುಗಳಲ್ಲಿ ಏಳನೇ ವೇತನ ಆಯೋಗವನ್ನು ಜಾರಿಗೆ ತರಲು ರಾಜ್ಯ ಸರ್ಕಾರವು ಬದ್ಧವಾಗಿದ್ದು, ಸರ್ಕಾರವು ಹೆಚ್ಚುವರಿ ಆರ್ಥಿಕ ಹೊರೆಯನ್ನು ಹೊರುವ ನಿರೀಕ್ಷೆಯಿದೆ. ಸರ್ಕಾರ ಅನಗತ್ಯ ಹುದ್ದೆಗಳಿಗೆ ಕಡಿವಾಣ ಹಾಕಬೇಕು ಮತ್ತು ಕೆಲವು ಹುದ್ದೆಗಳನ್ನು ಹೊರಗುತ್ತಿಗೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದರು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 2.55 ಲಕ್ಷ ಖಾಲಿ ಹುದ್ದೆಗಳಲ್ಲಿ 75,000 ಕ್ಕೂ ಹೆಚ್ಚು ಶಿಕ್ಷಣ ಇಲಾಖೆಯಲ್ಲಿ (ಉನ್ನತ ಮತ್ತು ಶಾಲಾ ಶಿಕ್ಷಣ), 35,196 ಆರೋಗ್ಯ ಇಲಾಖೆಯಲ್ಲಿ ಮತ್ತು 22,069 ಗೃಹ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳಿದ್ದು, ಅದರಲ್ಲಿ ಶಿಕ್ಷಕರು, ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳು ಹೆಚ್ಚಾಗಿ ಖಾಲಿ ಉಳಿದಿವೆ. ಇದಲ್ಲದೇ ಕಂದಾಯ, ಆರ್‌ಡಿಪಿಆರ್‌, ಪಶುಸಂಗೋಪನೆ, ಹಣಕಾಸು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ತಲಾ ಸುಮಾರು 10 ಸಾವಿರ ಹುದ್ದೆಗಳು ಖಾಲಿ ಇವೆ.

ಮುಂದಿನ ಕೆಲವು ವರ್ಷಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಘೋಷಿಸಿತ್ತು. 2.55 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸವಾಲಿನ ಸಂಗತಿಯಾಗಿದೆ. ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದು ಇನ್ನಷ್ಟು ಸವಾಲಿನದ್ದಾಗಿದೆ ಏಕೆಂದರೆ ಇದು ದೊಡ್ಡ ಆರ್ಥಿಕ ಪರಿಣಾಮಗಳನ್ನು ಹೊಂದಿರುತ್ತದೆ. ಮಂಜೂರಾದ ಹುದ್ದೆಗಳು 7.2 ಲಕ್ಷ, ಮತ್ತು ಈಗ 2.55 ಲಕ್ಷ ಹುದ್ದೆಗಳು ಖಾಲಿ ಇದ್ದರೂ, ಜನರು ನಿವೃತ್ತಿಯಾದ ನಂತರ ಅವು ಹೆಚ್ಚಾಗುತ್ತವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರಕಾರವು ವಾರ್ಷಿಕ ಸರಾಸರಿ 65 ಸಾವಿರ ಕೋಟಿ ರೂಪಾಯಿಗಳನ್ನು ವೇತನಕ್ಕಾಗಿ ವ್ಯಯಿಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲ ವೇತನವನ್ನು ಶೇಕಡ 40ರಷ್ಟು ಹೆಚ್ಚಿಸಬೇಕೆಂಬ ಬೇಡಿಕೆ ಇದ್ದು, ಏಳನೇ ವೇತನ ಆಯೋಗದ ಮುಂದಿದೆ. ಸಮಿತಿಯು ಶಿಫಾರಸು ಮಾಡಿದರೆ, ಸರ್ಕಾರಕ್ಕೆ ಇನ್ನೂ 12 ಸಾವಿರ ಕೋಟಿ ರೂಪಾಯಿ ಬೇಕಾಗಬಹುದು. ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದರೆ, ಹಣಕಾಸಿನ ಹೊರೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು. 

ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಮುಖ್ಯಸ್ಥರೂ ಆದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್,  ಗ್ರೂಪ್ ಡಿ ಸಿಬ್ಬಂದಿ ಹಾಗೂ ಚಾಲಕರ ಹಲವು ಹುದ್ದೆಗಳನ್ನು ಹೊರಗುತ್ತಿಗೆ ನೀಡಿದರೆ ಸ್ವಲ್ಪ ಮಟ್ಟಿಗೆ ಆರ್ಥಿಕ ಹೊರೆ ತಗ್ಗಿಸಬಹುದು. ಅಲ್ಲದೆ, ಹೆಚ್ಚಿನ ಕೆಲಸಗಳು ಗಣಕೀಕರಣಗೊಂಡಿರುವುದರಿಂದ ಮೊದಲ ವಿಭಾಗದ ಸಹಾಯಕ ಮತ್ತು ಎರಡನೇ ವಿಭಾಗದ ಸಹಾಯಕರಂತಹ ಕೆಲವು ವಿಭಾಗಗಳಲ್ಲಿನ ಪೋಸ್ಟ್‌ಗಳನ್ನು ಮರುಹಂಚಿಕೆ ಮಾಡಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com