ಬಳ್ಳಾರಿ: ಹಂಪಿ ಉತ್ಸವದ ಆಯೋಜನೆಯಲ್ಲಿ ಅಧಿಕಾರಿಗಳು ನಿರತರಾಗಿರುವುದನ್ನು ಲಾಭವಾಗಿ ಪಡೆದುಕೊಳ್ಳಲು ಮುಂದಾದ ಕೆಲವರು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸಂರಕ್ಷಿತ ಪ್ರದೇಶದಲ್ಲಿರುವ ಪ್ರಸಿದ್ಧ ವಿರೂಪಾಕ್ಷ ದೇವಸ್ಥಾನದ ಸಮೀಪದಲ್ಲಿ ಅಕ್ರಮವಾಗಿ ಹೋಟೆಲ್ ಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಸ್ಥಳೀಯರು ಎಚ್ಚರಿಕೆ ನೀಡಿದ ನಂತರ ಸ್ಥಳಕ್ಕೆ ಭೇಟಿ ನೀಡದ ಅಧಿಕಾರಿಗಳು ಕಾಮಗಾರಿ ಕಾರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ.
ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಕೆಲವರು ರಾತ್ರಿ ಸಮಯದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ಅಕ್ರಮವಾಗಿ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಿರುವ ಹೋಟೆಲ್ ಮಾಲೀಕರಿಗೆ ರಾಜಕೀಯ ನಾಯಕರ ಬೆಂಬಲವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ವಿರೂಪಾಕ್ಷ ದೇವಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸ್ಮಾರಕಕ್ಕೂ ಹಾನಿಗಳಾಗಿರಲಿಲ್ಲ.
ಎಎಸ್ಐ ನಿಯಮಗಳ ಪ್ರಕಾರ, 200 ಮೀಟರ್ ಗಳ ದೂರದ ವರೆಗೆ ಯಾವುದೇ ರೀತಿಯ ತಾತ್ಕಾಲಿಕ ಅಥವಾ ಶಾಶ್ವತ ನಿರ್ಮಾಣ ಕಾರ್ಯಗಳಿಗೆ ಅನುಮತಿ ನೀಡುವಂತಿಲ್ಲ. ಆದರೆ, ಪ್ರಸ್ತುತ ಹೋಟೆಲ್ ಮಾಲೀಕರು ಸಿಲಿಂಡರ್ ಸ್ಫೋಟಗೊಂಡಿದ್ದ ಸ್ಥಳದಲ್ಲಿಯೇ ಹೊಸ ಕಟ್ಟಡಗಳ ನಿರ್ಮಾಣ ಮಾಡುತ್ತಿದ್ದಾರೆಂದು ಸ್ಥಳೀಯರು ಹೇಳಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಮಾತನಾಡಿ, ವಿರೂಪಾಕ್ಷ ದೇವಸ್ಥಾನದ ಬಳಿ ಎಎಸ್ಐ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವ ಕಾಮಗಾರಿಯನ್ನು ಆಡಳಿತ ಗಮನಿಸಿದೆ. “ನಾನು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಶೀಘ್ರವೇ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದ ಹೇಳಿದ್ದಾರೆ.
ಅಕ್ರಮ ಕಟ್ಟಣ ನಿರ್ಮಾಣ ಸಂಬಂಧ ಈಗಾಗಲೇ ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದಾಖಲಿಸಲಾಗಿದೆ. “ಎಎಸ್ಐ ಮಾರ್ಗಸೂಚಿಗಳ ಪ್ರಕಾರ, ಎಎಸ್ಐ ಸಂರಕ್ಷಿತ ಪ್ರದೇಶದಲ್ಲಿ ಯಾವುದೇ ರೀತಿಯ ನಿರ್ಮಾಣವು ಕಾನೂನುಬಾಹಿರವಾಗಿದೆ. ಸ್ಥಳಕ್ಕೆ ಈಗಾಗಲೇ ಭೇಟಿ ನೀಡಲಾಗಿದ್ದು, ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ತಿಳಿಸಿದ್ದಾರೆ.
Advertisement