ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿಗೆ ಚಾಲನೆ

ಕಳೆದ ಒಂದು ದಶಕದಿಂದ ನೆನಗುದಿಗೆ ಬಿದ್ದಿದ್ದ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಭೂಮಿ ಪೂಜೆ ಸಂದರ್ಭದಲ್ಲಿ ಸಂಸದ ಡಿವಿ ಸದಾನಂದಗೌಡ, ಶಾಸಕ ಎಸ್ ಆರ್ ವಿಶ್ವನಾಥ್
ಭೂಮಿ ಪೂಜೆ ಸಂದರ್ಭದಲ್ಲಿ ಸಂಸದ ಡಿವಿ ಸದಾನಂದಗೌಡ, ಶಾಸಕ ಎಸ್ ಆರ್ ವಿಶ್ವನಾಥ್

ಬೆಂಗಳೂರು: ಕಳೆದ ಒಂದು ದಶಕದಿಂದ ನೆನಗುದಿಗೆ ಬಿದ್ದಿದ್ದ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಈ ಫ್ಲೈಓವರ್ ನಲ್ಲಿ ಆಗುತ್ತಿದ್ದ ವಾಹನ ದಟ್ಟಣೆ ನಿವಾರಣೆ ನಿಟ್ಟಿನಲ್ಲಿ ಈ ವಿಸ್ತರಣೆ ಯೋಜನೆ ಮಹತ್ವದ್ದಾಗಿದ್ದು, ಯೋಜನೆಯ ಮೊದಲ ಹಂತದಲ್ಲಿ ವಿಮಾನನಿಲ್ದಾಣ ರಸ್ತೆಯಿಂದ ಬೆಂಗಳೂರು ಕಡೆಗೆ ಮೂರು ಲೇನ್ ಗಳ ಮೇಲ್ಸೇತುವೆ ರಸ್ತೆ ಮತ್ತು ಯಶವಂತಪುರ- ಕೆಆರ್ ಪುರ ಮಾರ್ಗದಲ್ಲಿ ಮೂರು ಲೇನ್ ನ ಅಂಡರ್ ಪಾಸ್ ನಿರ್ಮಾಣವಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್, ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆಗೆ ಒಟ್ಟು 225 ಕೋಟಿ ರೂಪಾಯಿಗಳ ಯೋಜನೆಯನ್ನು ಸಿದ್ಧಪಡಿಸಲಾಗಿದ್ದು, ಹಣವನ್ನೂ ಮಂಜೂರು ಮಾಡಲಾಗಿದೆ. ಈಗ ಮೊದಲ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದಕ್ಕಾಗಿ 87 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು.

ವಿಮಾನ ನಿಲ್ದಾಣ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಒಟ್ಟು 715 ಮೀಟರ್ ಉದ್ದದ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತದೆ. ವಿಮಾನನಿಲ್ದಾಣದ ಕಡೆಯಿಂದ ಆರಂಭದಲ್ಲಿ ಎರಡು ಪಥವಿದ್ದು, ರೈಲ್ವೆ ಹಳಿಯ ಮೇಲೆ ಕೆಆರ್ ಪುರದಿಂದ ಲೂಪ್ ಬಂದು ಸೇರಿಕೊಳ್ಳುತ್ತದೆ. ಈ ಸ್ಥಳದಿಂದ ಒಟ್ಟು ಮೂರು ಪಥಗಳು ನಿರ್ಮಾಣವಾಗಲಿವೆ.

ಅದೇರೀತಿ ಯಶವಂತಪುರ ಕಡೆಯಿಂದ ಕೆಆರ್ ಪುರ ಕಡೆಗೆ ಮೂರು ಲೇನ್ ನ ಅಂಡರ್ ಪಾಸ್ ನಿರ್ಮಾಣವಾಗಲಿದೆ ಎಂದು ತಿಳಿಸಿದ ವಿಶ್ವನಾಥ್, ಈ ಹಿಂದೆ ಕಾಮಗಾರಿಗೆ 26 ತಿಂಗಳ ಕಾಲಮಿತಿಯನ್ನು ಹಾಕಲಾಗಿತ್ತು. ಆದರೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾಮಗಾರಿಯನ್ನು ಒಂದು ವರ್ಷದಲ್ಲಿ ಮುಗಿಸುವಂತೆ ಗುತ್ತಿಗೆದಾರರಿಗೆ ಕಟ್ಟಪ್ಪಣೆ ಮಾಡಲಾಗಿದೆ ಎಂದು ವಿವರಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ವಿ.ಸದಾನಂದಗೌಡ ಮಾತನಾಡಿ, ನಮ್ಮ ಕ್ಷೇತ್ರ ವ್ಯಾಪ್ತಿಯ ಈ ಹೆಬ್ಬಾಳ ಜಂಕ್ಷನ್ ನಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ವಾಹನ ಸವಾರರಿಗೆ ಸಮಸ್ಯೆ ಉಂಟಾಗುತ್ತಿತ್ತು. ಬಿಡಿಎ ಇದೀಗ ವಿಸ್ತರಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದ್ದು, ಕಾಮಗಾರಿಯನ್ನು ವಿಳಂಬವಾಗದ ರೀತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಲಹೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com