ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜನವರಿ 11 ರಂದು ನೀಡಿದ್ದ ಮಧ್ಯಂತರ ಆದೇಶವು ಜನವರಿ 15 ರಂದು ನಿಗದಿಯಾಗಿರುವ ಕಾರ್ಯಕ್ರಮಕ್ಕೆ ಅಡ್ಡಿಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.
ಇಶಾ ಯೋಗ ಕೇಂದ್ರ ಜನವರಿ 15 ರಂದು ನಂದಿ ಬೆಟ್ಟದ ಕೇಂದ್ರದಲ್ಲಿ ಆದಿ ಯೋಗಿ ಪ್ರತಿಮೆ ಅನಾವರಣಗೊಳಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಕರ್ ಭಾಗವಹಿಸಲಿದ್ದಾರೆ.
ಉಪರಾಷ್ಟ್ರಪತಿಗಳು ಭಾಗವಹಿಸುವ ನಿಗದಿತ ಕಾರ್ಯಕ್ರಮಕ್ಕೆ ಅಗತ್ಯವಿರುವ ವ್ಯವಸ್ಥೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಆಪಾದಿತ ಅರಣ್ಯನಾಶ ಅಥವಾ ನಿರ್ಮಾಣ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಇಶಾ ಯೋಗ ಕೇಂದ್ರ ಭರವಸೆ ನೀಡಿದೆ.
ಯಥಾಸ್ಥಿತಿ ಆದೇಶ ತೆರವುಗೊಳಿಸುವಂತೆ ಕೋರಿ ಇಶಾ ಯೋಗ ಕೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಇಶಾ ಯೋಗ ಕೇಂದ್ರದಲ್ಲಿ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ದಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧಂಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ. ಸುಧಾಕರ್ ಸೇರಿದಂತೆ ಗಣ್ಯಾತಿಗಣ್ಯರು ಆಶ್ರಮಕ್ಕೆ ಆಗಮಿಸಿ ಜನವರಿ 15ರಂದು ಸಂಜೆ ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.
Advertisement