ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ

ಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ...
ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.
ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.
Updated on

ಬೆಂಗಳೂರು: ಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ ನಗರದ ಫ್ರೀಡಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು, ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

25,000 ಕೋಟಿ ಬಾಕಿ ಹಣ ಬಿಡುಗಡೆ, ಜಿಎಸ್‌ಟಿ ದರ ಇಳಿಕೆ, ಕಿರುಕುಳ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ, ಕಾಮಗಾರಿಗಳ ಸುಗಮ ಟೆಂಡರ್ ಪ್ರಕ್ರಿಯೆಗೆ ಗುತ್ತಿಗೆದಾರರು ಆಗ್ರಹಿಸಿದ್ದಾರೆ.

ತೋಟಗಾರಿಕಾ ಸಚಿವ ಮುನಿರತ್ನ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಂತರ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಮತ್ತು ಇತರ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏಕತೆ ಹಾಗೂ ಶಕ್ತಿಯ ಸಾಂಕೇತಿಕವಾಗಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.

ಶಾಸಕರು ಹಾಗೂ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಈ ಸಂಬಂಧ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಬೇಕೆಂದು ಒತ್ತಾಯಿಸಿದ್ದರು. ಈ ಸಂಬಂಧ ಸಚಿವರು, ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ನೂರಾರು ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಕೆಂಪಣ್ಣ ಅವರು ಮಾಡಿರುವ ಆರೋಪಗಳ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸುತ್ತೇವೆಂದು ಹೇಳಿದ್ದಾರೆ.

ಬಹುತೇಕ ಕಾಮಗಾರಿಗಳು ಮುಖ್ಯವಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ನೀರಾವರಿ ಇಲಾಖೆ ಮತ್ತು ಬಿಬಿಎಂಪಿಗೆ ಸಂಬಂಧಿಸಿದ್ದಾಗಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಅವರು ಮಾತನಾಡಿ, ಗುತ್ತಿಗೆದಾರರ ಬಾಕಿ ಹಣವನ್ನು ಜನವರಿ 31ರೊಳಗೆ ಪಾವತಿಸುವಂತೆ ಬಿಬಿಎಂಪಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಜ.31ರೊಳಗೆ ಹಣ ಬಿಡುಗಡೆ ಮಾಡದೇ ಹೋದಲ್ಲಿ ಕಾಮಗಾರಿ ಕೆಲಸಗಳ ಸ್ಥಗಿತಗೊಳಿಸುತ್ತೇವೆಂದು ಪುನರುಚ್ಛರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com