ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ಉದ್ಘಾಟನೆ; ಬೆಂಗಳೂರಿನಲ್ಲಿ ಹಸಿರು ಪ್ರದೇಶ ಹೆಚ್ಚಿಸಲು 100 ಕೋಟಿ ರೂ.: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು 100 ಕೋಟಿ ಅನುದಾನ ನೀಡುತ್ತಿದ್ದೇವೆ. ಇನ್ನು ಮುಂದೆ ‘ಉದ್ಯಾನ ನಗರಿ’ ಶೀರ್ಷಿಕೆಗೆ ಹೊಂದುವ ಉದ್ಯಾನಗಳನ್ನು ಅಭಿವೃದ್ಧಿಪಡಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 213ನೇ ದ್ವೈವಾರ್ಷಿಕ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಹೇಳಿದರು.
Published: 21st January 2023 08:55 AM | Last Updated: 21st January 2023 02:29 PM | A+A A-

ದ್ವೈವಾರ್ಷಿಕ ಲಾಲ್ಬಾಗ್ ಫಲಪುಷ್ಪ ಪ್ರದರ್ಶನದ ಉದ್ಘಾಟನೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಮುನಿರತ್ನ
ಬೆಂಗಳೂರು: ನಗರದಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು 100 ಕೋಟಿ ಅನುದಾನ ನೀಡುತ್ತಿದ್ದೇವೆ. ಇನ್ನು ಮುಂದೆ ‘ಉದ್ಯಾನ ನಗರಿ’ ಶೀರ್ಷಿಕೆಗೆ ಹೊಂದುವ ಉದ್ಯಾನಗಳನ್ನು ಅಭಿವೃದ್ಧಿಪಡಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 213ನೇ ದ್ವೈವಾರ್ಷಿಕ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಹೇಳಿದರು.
ಜನವರಿ 20 ರಿಂದ 30ರವರೆಗೆ ಲಾಲ್ಬಾಗ್ನಲ್ಲಿ ನಡೆಯಲಿರುವ ಈ ವರ್ಷದ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನದ ಥೀಮ್ 'ಬೆಂಗಳೂರಿನ ಇತಿಹಾಸ'. ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಮುಖ್ಯಮಂತ್ರಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದ ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಕುಗ್ಗಿದೆ ಎಂದರು.
ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನಗಳು ಹಾಗೂ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿರುವ ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುವುದು. ಮುಂಬರುವ ಬಜೆಟ್ನಲ್ಲಿ ಹಸಿರನ್ನು ಹೆಚ್ಚಿಸಲು ಸರ್ಕಾರ 100 ಕೋಟಿ ರೂ.ಗಳನ್ನು ಮೀಸಲಿಡಲಿದೆ. ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರವನ್ನು ಸುಧಾರಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ನಿಸರ್ಗದಲ್ಲಿ ಸಮತೋಲನ ಕಾಯ್ದುಕೊಳ್ಳಲು ಗುಡ್ಡಗಾಡು ಪ್ರದೇಶಗಳಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮೊದಲ ಬಾರಿಗೆ ಕೈಗೆತ್ತಿಕೊಂಡಿದೆ. ಅಂತೆಯೇ, ತೋಟಗಾರಿಕೆ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ವಿಸ್ತರಿಸಲಾಗುವುದು. ಈ ನಿಟ್ಟಿನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಹಸಿರು ಹೊದಿಕೆಯ ವಿಸ್ತರಣೆಯೊಂದಿಗೆ, ಅದರ ಉತ್ಪಾದನೆ ಮತ್ತು ಉತ್ಪಾದಕತೆಯೂ ಹೆಚ್ಚಾಗುತ್ತದೆ. ಕೃಷಿ ಭೂಮಿಗಳ ಬೆಳವಣಿಗೆಯೊಂದಿಗೆ ತೋಟಗಾರಿಕೆ ಅಭಿವೃದ್ಧಿಯಲ್ಲಿ ಸರ್ಕಾರ ತೊಡಗಿಸಿಕೊಂಡಿದೆ ಎಂದು ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಬೆಂಗಳೂರು ನಗರ ಇತಿಹಾಸ ಸಾರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಲಾಲ್ ಬಾಗ್ ನಲ್ಲಿ ಸಿಎಂ ಬೊಮ್ಮಾಯಿ ಚಾಲನೆ
ಫಲಪುಷ್ಪ ಪ್ರದರ್ಶನ ಉತ್ತಮವಾಗಿ ಮೂಡಿಬಂದಿದೆ. ಈ ಬಾರಿ 10 ಲಕ್ಷದಿಂದ 12 ಲಕ್ಷ ಮಂದಿ ಭೇಟಿ ನೀಡುವ ನಿರೀಕ್ಷೆ ಇದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಲ್ಬಾಗ್, ಕಬ್ಬನ್ ಪಾರ್ಕ್ ಮತ್ತು ಇತರ ಹಸಿರು ಸ್ಥಳಗಳನ್ನು ಹೊರತುಪಡಿಸಿ, ನಗರದ ಹೊರವಲಯದಲ್ಲಿ ಹೊಸ ಉದ್ಯಾನಗಳನ್ನು ರಚಿಸುವ ಅವಶ್ಯಕತೆಯಿದೆ ಮತ್ತು ಹೆಚ್ಚಿನ ಮರಗಳನ್ನು ನೆಡಬೇಕು ಎಂದು ತಿಳಿಸಿದರು.
ಇದೇ ವೇಳೆ ಬೊಮ್ಮಾಯಿ ಅವರು ಗ್ಲಾಸ್ ಹೌಸ್ನಲ್ಲಿನ ವಸ್ತುಪ್ರದರ್ಶನಗಳನ್ನು ವೀಕ್ಷಿಸಿದರು ಮತ್ತು ವ್ಯವಸ್ಥೆಗಳನ್ನು ಪರಿಶೀಲಿಸಿದರು. ಲಾಲ್ಬಾಗ್ನ ಪಶ್ಚಿಮ ದ್ವಾರದಲ್ಲಿರುವ ವಿಶೇಷ ಥೀಮ್ ಪ್ರದೇಶವನ್ನೂ ಸಹ ವೀಕ್ಷಿಸಿದರು. ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.