ಮುಂಬರುವ ರಾಜ್ಯ ಬಜೆಟ್ ಖಾದಿ ಉದ್ಯಮವನ್ನು ಬಲಪಡಿಸಲಿದೆ: ಸಿಎಂ ಬೊಮ್ಮಾಯಿ

ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ನಗರದಲ್ಲಿ ನಡೆದ ‘ಖಾದಿ ಉತ್ಸವ-2023’ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಕೃಷಿಯ ನಂತರ ಜವಳಿ ಕ್ಷೇತ್ರವು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರಿಗೆ ಉದ್ಯೋಗ ನೀಡುತ್ತಿದೆ. ಆದ್ದರಿಂದ ಖಾದಿ ಉದ್ಯಮದಲ್ಲಿ ಹೆಚ್ಚಿನ ಉದ್ಯೋಗ ಮತ್ತು ವ್ಯಾಪಾರ ಅವಕಾಶಗಳನ್ನು ಸೃಷ್ಟಿಸಲು ಹೆಚ್ಚಿನ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಮುಂಬರುವ ರಾಜ್ಯ ಬಜೆಟ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಆರ್ಥಿಕ ನೆರವು ನೀಡಲಾಗುವುದು. ಖಾದಿ ಮತ್ತು ಕೈಮಗ್ಗ ಕ್ಷೇತ್ರದಲ್ಲಿ ಕೆಲಸ ಮಾಡುವವರು ತಾಂತ್ರಿಕವಾಗಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಅವರಿಗೆ ಎಲ್ಲಾ ಹಂತದಲ್ಲೂ ತಂತ್ರಜ್ಞಾನವನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಕುರಿತು ಶಿಕ್ಷಣ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಜನರಿಗೆ ಶಿಕ್ಷಣ ನೀಡಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಸೂಚಿಸಿದರು.

ಉತ್ಪಾದನಾ ವಲಯದಲ್ಲಿ ಮಹಿಳೆಯರಿಗೆ 5 ಲಕ್ಷದವರೆಗೆ ಪ್ರೋತ್ಸಾಹ ಧನ ನೀಡುವ ಮೂಲಕ ಸಬಲೀಕರಣಗೊಳಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಕಾರ್ಮಿಕ ವರ್ಗದ ಜನತೆಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು. ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆರ್ಥಿಕ ಬಲವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರತಿಪಾದಿಸಿದರು.

ಬಳಿಕ ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸಿದ ಬೊಮ್ಮಾಯಿ ಅವರು, ಗಾಂಧೀಜಿಯವರು ಖಾದಿಗೆ ಮಹತ್ವ ನೀಡಿದರು. ಖಾದಿ ಉದ್ಯಮವನ್ನು ದೊಡ್ಡ ಪ್ರಮಾಣದ ಉತ್ಪಾದನಾ ಘಟಕವನ್ನಾಗಿ ಮಾಡುವ ಬದಲು, ಭಾರತದಲ್ಲಿ ಗರಿಷ್ಠ ಜನರಿಗೆ ಉದ್ಯೋಗವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಜನಸಾಮಾನ್ಯರಿಂದ ಉತ್ಪಾದನೆಯನ್ನು ಮುಂದುವರಿಸಬೇಕು. ಇದಕ್ಕಾಗಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಉತ್ಸವವನ್ನು ಆಯೋಜಿಸಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com