ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಬಳ್ಳಾರಿ ಡಿಸಿಯನ್ನು ಅಮಾನತು ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.
Published: 28th January 2023 08:26 AM | Last Updated: 28th January 2023 07:21 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.
ಗುರುವಾರ ರಾತ್ರಿ ಬಳ್ಳಾರಿಯ ತಮ್ಮ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರು.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಅಧಿಕಾರಿಯ ಕ್ರಮ ಆಘಾತಕಾರಿ. ರಾತ್ರಿ 10 ಗಂಟೆಗೆ ಡಿಸಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ ವಿದ್ಯಾರ್ಥಿಗಳನ್ನು ಹಾಸ್ಟೆಲ್ನಿಂದ ಹೊರ ಹಾಕಲಾಗಿದೆ. ಸಮಸ್ಯೆಯನ್ನು ತಮ್ಮ ಗಮನಕ್ಕೆ ತಂದು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಂಡಿದ್ದಕ್ಕಾಗಿ ಡಿಸಿ ವಿದ್ಯಾರ್ಥಿಗಳನ್ನು ಶ್ಲಾಘಿಸಬೇಕಿತ್ತು. ಬದಲಾಗಿ ಅವರನ್ನು ಹಾಸ್ಟೆಲ್ನಿಂದ ಹೊರಹಾಕುವಂತೆ ಆದೇಶ ಹೊರಡಿಸಿದ್ದಾರೆ. ಇಷ್ಟೊತ್ತಿಗಾಗಲೇ ಜಿಲ್ಲಾಧಿಕಾರಿಯ ಅಮಾನವೀಯ ಕೃತ್ಯಕ್ಕೆ ಸರ್ಕಾರ ಅವರನ್ನು ಅಮಾನತು ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಅಧಿಕಾರಿಯನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸುವ ಬದಲು ಶ್ರೀರಾಮುಲು ಅವರು ವಿದ್ಯಾರ್ಥಿಗಳು ಕ್ಷಮೆಯಾಚಿಸುವಂತೆ ಹೇಳಿದ್ದಾರೆ. ತಮ್ಮ ಸಮುದಾಯದ ವಿದ್ಯಾರ್ಥಿಗಳಿಗ ಹಾಸ್ಟೆಲ್ನಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಲು ಸಾಧ್ಯವಾಗದ ಸಚಿವರು, ರಾಜ್ಯದ ಬಡ ಜನರಿಗೆ ಹೇಗೆ ನ್ಯಾಯ ಒದಗಿಸುತ್ತಾರೆಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕಳಪೆ ಗುಣಮಟ್ಟದ ಆಹಾರ: ಬಳ್ಳಾರಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ, ಹಾಸ್ಟೆಲ್ನಿಂದ ವಿದ್ಯಾರ್ಥಿಗಳ ಹೊರಹಾಕಿದ ಅಧಿಕಾರಿಗಳು!
ಅಲ್ಲದೆ, ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಡಿಸಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಇತರ ಎಲ್ಲ ಅಧಿಕಾರಿಗಳನ್ನು ಸರಕಾರ ಕೂಡಲೇ ಅಮಾನತುಗೊಳಿಸಿ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ವಿಫಲರಾಗಿರುವ ಜಿಲ್ಲಾ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಸರಕಾರ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಎಸ್ಸಿ/ಎಸ್ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಇತರ ಸೌಲಭ್ಯಗಳನ್ನು ನೀಡಲು ಸಾಕಷ್ಟು ಅನುದಾನ ಸಿಗದಿರುವ ಬಗ್ಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅಧಿಕಾರಿಗಳು ಬೊಮ್ಮಾಯಿ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಇದೇ ವೇಳೆ ಸಿದ್ದರಾಮಯ್ಯ ಅವರು ಹೇಳಿದರು.