ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ರದ್ದುಪಡಿಸುವ ಮೂಲಕ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಈಗಾಗಲೇ ಎನ್ಇಪಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದು, ಬದಲಾಗಿ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಿದೆ ಎಂದಿದ್ದಾರೆ. ಅವರು ಎನ್ಇಪಿಯನ್ನು ನಾಗ್ಪುರ ಶಿಕ್ಷಣ ನೀತಿ ಎಂದು ನಾಗ್ಪುರದಲ್ಲಿರುವ ಆರ್ಎಸ್ಎಸ್ ಕೇಂದ್ರ ಕಚೇರಿಯನ್ನು ಉಲ್ಲೇಖಿಸಿದ್ದಾರೆ.
ಗುರುವಾರ ಮಾತನಾಡಿದ ಶಿವಕುಮಾರ್, ಎನ್ಇಪಿ ಕುರಿತು ವಿಸ್ತೃತ ಚರ್ಚೆ ನಡೆಯಬೇಕಿತ್ತು. ನಾನು ಕೂಡ ನನ್ನಾಯ್ಕೆಯಂತೆ ಶಿಕ್ಷಣ ತಜ್ಞ. ನಾನು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ ಮತ್ತು ವಿವಿಧ ಸಂಸ್ಥೆಗಳಲ್ಲಿ ಟ್ರಸ್ಟಿ ಅಥವಾ ಅಧ್ಯಕ್ಷ ಹುದ್ದೆಯಲ್ಲಿದ್ದೇನೆ. ನನಗೆ ಎನ್ಇಪಿ ಅರ್ಥವಾಗುತ್ತಿಲ್ಲ. ಎರಡು ಅಥವಾ ಮೂರು ಬಾರಿ ಅಧ್ಯಯನ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ. ಆದರೆ ವಿಫಲನಾದೆ' ಎಂದರು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿದರೂ ಎನ್ಇಪಿಯ ಸಾರವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಎನ್ಇಪಿಯನ್ನು ಹಿಂಪಡೆದುಕೊಳ್ಳಲು ಒತ್ತಾಯಿಸಿದ್ದರು ಮತ್ತು ವಿದ್ಯಾರ್ಥಿಗಳಿಗೆ ಕೋಮುವಾದದ ವಿಷಯಗಳನ್ನು ಕಲಿಸುವುದು ಎನ್ಇಪಿಯ ಉದ್ದೇಶವಾಗಿದೆ. ಎನ್ಇಪಿ ರಾಜ್ಯದ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು.
ವಿದ್ಯಾರ್ಥಿ ಸಮುದಾಯದ ಪಠ್ಯಕ್ರಮಕ್ಕೆ ಸೇರ್ಪಡೆಗೊಂಡಿರುವ ಎಲ್ಲಾ ಹೊಸ ವಿಚಾರಗಳನ್ನು ತೆಗೆದುಹಾಕುವ ಗುರಿಯನ್ನು ಕಾಂಗ್ರೆಸ್ ಸರ್ಕಾರ ಹೊಂದಿದೆ. ಹೊಸ ನೀತಿಯು ನೆಲದ ಆದ್ಯತೆಗಳು ಮತ್ತು ಅಗತ್ಯತೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಮೂಲಗಳು ವಿವರಿಸುತ್ತವೆ. ಶಿವಕುಮಾರ್ ಕೂಡ ಈ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು ಎಂದು ಹೇಳಿಕೆ ನೀಡಿದ್ದರು.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಗೆ ತರಲು ಸುಮಾರು ಮೂರು ವರ್ಷ ತೆಗೆದುಕೊಂಡಿದೆ. ಯು.ಆರ್. ರಾವ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ ಮತ್ತು ಎಲ್ಲಾ ರಾಜ್ಯಗಳಿಂದ ಒಪ್ಪಿಗೆ ಪಡೆಯಲಾಗಿದೆ. ಅನುಷ್ಠಾನದ ಮೊದಲು, ಕಾರ್ಯಪಡೆಯನ್ನು ರಚಿಸಲಾಯಿತು ಮತ್ತು ನಂತರ ಅದನ್ನು ಉನ್ನತ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಅಳವಡಿಸಲಾಯಿತು ಎಂದು ಸಮರ್ಥಿಸಿಕೊಂಡರು.
Advertisement