ಬೆಂಗಳೂರು ನಿರ್ವಹಣೆಗೆ ಸಮಿತಿ ರಚಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು ನಿರ್ವಹಣೆಗೆ ಪರಂಪರೆ ಸಂರಕ್ಷಣಾ ಸಮಿತಿ, ಮಹಾನಗರ ಯೋಜನಾ ಸಮಿತಿ ಮತ್ತು ಕುಂದುಕೊರತೆಗಳ ಪರಿಹಾರ ಪ್ರಾಧಿಕಾರ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರು ನಿರ್ವಹಣೆಗೆ ಪರಂಪರೆ ಸಂರಕ್ಷಣಾ ಸಮಿತಿ, ಮಹಾನಗರ ಯೋಜನಾ ಸಮಿತಿ ಮತ್ತು ಕುಂದುಕೊರತೆಗಳ ಪರಿಹಾರ ಪ್ರಾಧಿಕಾರ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರೂ ಆಗಿರುವ ವಕೀಲ ಉಮಾಪತಿ ವಾದ ಮಂಡಿಸಿ, ಬೆಂಗಳೂರು ಅಭಿವೃದ್ಧಿಯಾಗುತ್ತಿದ್ದು, ಕಾಯಿದೆಯಲ್ಲಿ ಉಲ್ಲೇಖಿಸಿರುವ ಮೂರು ಸಮಿತಿಗಳು ನಗರದ ಸಮಗ್ರ ಅಭಿವೃದ್ಧಿಗೆ ಅತ್ಯಗತ್ಯ. ಅಲ್ಲದೆ, ಬಿಬಿಎಂಪಿ ಅಧಿಕಾರಿಗಳಿಗೆ ಯೋಜನೆ ರೂಪಿಸುವ ಸಂಬಂಧ ಯಾವುದೇ ಜ್ಞಾನ ಇಲ್ಲ. ಇದಕ್ಕಾಗಿ ತಜ್ಞರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿಗಳು ಬೇಕಾಗಿದೆ. ಆದರೆ, ಸರ್ಕಾರ ಈವರೆಗೂ ಇವುಗಳ ಅನುಷ್ಟಾನ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿವರಿಸಿದರು.

ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಲಾಗಿದಿಯೇ ಎಂದು ಪೀಠ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ನ್ಯಾಯಾಲಯದ ನಿರ್ದೇಶನ ನೀಡದೆ ಅಧಿಕಾರಿಗಳು ನಿದ್ದೆಯಿಂದ ಎದ್ದೇಳುವುದಿಲ್ಲ. ಯಾವುದೇ ಕ್ರಮಕ್ಕೂ ಮುಂದಾಗುವುದಿಲ್ಲ. ಹೀಗಾಗಿ ಸಮಿತಿಗಳ ರಚನೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಸಮಿತಿಗಳನ್ನು ರಚನೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಅವ್ಯವಸ್ಥಿತವಾಗಿ ಬೆಳವಣಿಗೆಯಾಗುತ್ತಿದ್ದು, ಸಂಚಾರ ಸಮಸ್ಯೆಗಳು, ಕುಡಿಯುವ ನೀರಿನ ಕೊರತೆ, ಪಾರಂಪರಿಕ ಕಟ್ಟಡಗಳ ರಕ್ಷಣೆ ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗುತ್ತಿವೆ. ಸಾರ್ವಜನಿಕರ ಕುಂದುಕೊರತೆ ನಿವಾರಣಾ ಪ್ರಾಧಿಕಾರ ರಚನೆಯಾಗದ ಹಿನ್ನೆಲೆಯಲ್ಲಿ, ಪಾಲಿಕೆಯ ಆಡಳಿತದಲ್ಲಿನ ದುರಾಡಳಿತ ಮತ್ತು ನಾಗರೀಕರ ಸಮಸ್ಯೆಗಳ ಪರಿಹಾರ ಕಂಡುಕೊಳ್ಳುಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ಸಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಅಲ್ಲದೆ, ಬಿಬಿಎಂಪಿ ಕಾಯಿದೆ 2020ರ ಪ್ರಕಾರ ಬೆಂಗಳೂರು ನಗರದಲ್ಲಿ ಸೂಕ್ತ ರೀತಿಯ ಆಡಳಿತ ನಿರ್ವಹಣೆ ಮಾಡುವುದಕ್ಕಾಗಿ ಈ ಸಮಿತಿಗಳು ಅತ್ಯಗತ್ಯವಾಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಮನವಿ ಮಾಡಿ ಈ ಸಮಿತಿಗಳ ಪ್ರಾಮುಖ್ಯತೆಯನ್ನು ವಿವರಿಸಿದ್ದೇವೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com