ಬೆಳಗಾವಿ: ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ದೇವಗಿರಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಬೆಳಗಾವಿಯ ಕುರಿಹಾಳ್ ಗ್ರಾಮದ ನಿವಾಸಿ ಇಮಾಂಬಿ ಇಮಾಮ್ಸಾಬ್ ಜಾಸಿ (56) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಗಾಯಾಳುವನ್ನು ಆಕೆಯ ಮಗ ಅಲ್ಲಾವುದ್ದೀನ್ ಜಾಸಿ (46) ಎಂದು ಗುರ್ತಿಸಲಾಗಿದೆ.
ಅಲ್ಲಾವುದ್ದೀನ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಮಾಂಬಿ ಅವರು ಮಗನೊಂದಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕುರಿಹಾಳ್ ಗ್ರಾಮದಿಂದ ಕಾಕತಿಗೆ ಪ್ರಯಾಣಿಸುತ್ತಿದ್ದರು.
ಈ ವೇಳೆ ದೇವಗಿರಿ ಬಸ್ ನಿಲ್ದಾಣದ ಬಳಿ ಮರಳು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಮಹಿಳೆ ಮೇಲೆ ಹರಿದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಸಹಾಯ ಮಾಡುವ ಬದಲು ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ, ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಈ ಸಂಬಂಧ ಮಾಹಿತಿ ಪಡೆದ ಕಾಕತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement