ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಕೆಐಎಗೆ ಆಗಮಿಸಿರುವುದು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಕೆಐಎಗೆ ಆಗಮಿಸಿರುವುದು.

ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಸಿ: ಆಯೋಗಕ್ಕೆ ಬಿಜೆಪಿ, ಕಾಂಗ್ರೆಸ್ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಅನುಪ್ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಗುರುವಾರ ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಅನುಪ್ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಗುರುವಾರ ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಮೊದಲಿಗೆ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ವಿಕಾಸಸೌಧದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿದರು. ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೆ ಮುಕ್ತ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಚುನಾವಣೆ ನಡೆಸುವ ಸಂಬಂಧ ರಾಜಕೀಯ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಂಡರು.

ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿಯ ನಾಯಕರು ರಾಜ್ಯದಲ್ಲಿ ಎರಡು ಹಂತಗಳ ಬದಲಾಗಿ ಒಂದೇ ಹಂತದಲ್ಲಿ ಎಲ್ಲಾ 224 ಕ್ಷೇತ್ರಗಳ ಚುನಾವಣೆ ನಡೆಸುವಂತೆ ಒತ್ತಾಯಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ವಿಎಸ್ ಉಗ್ರಪ್ಪ ಮಾತನಾಡಿ, ಸಚಿವರು ಮತ್ತು ಇತರೆ ನಾಯಕರಿಂದ ನಡೆಯುವ ಅಕ್ರಮಗಳ ತಡೆಯಲು ಚುನಾವಣಾ ನೀತಿ ಸಂಹಿತೆಯನ್ನು ತಕ್ಷಣವೇ ಜಾರಿಗೊಳಿಸುವಂತೆ ಒತ್ತಾಯಿಸಿದರು. ಕೇಂದ್ರ ಹಾಗೂ ರಾಜ್ಯ ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದರು. ಕಾನೂನುಬಾಹಿರವಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ 33 ಲಕ್ಷ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಬೇಕು ಎಂದರು.

ಸಭೆಯಲ್ಲಿ ಚಿಲುಮೆ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪ್ರಾದೇಶಿಕ ಆಯುಕ್ತರ ವರದಿಯನ್ನು ಬಹಿರಂಗಪಡಿಸಬೇಕು ಮತ್ತು ತಪ್ಪಿತಸ್ಥ ಚುನಾವಣಾಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಆಗಬೇಕು ಒಂದು ಒತ್ತಾಯಿಸಿದರು.

ಗುಜರಾತ್‌, ಉತ್ತರ ಪ್ರದೇಶ ಹಾಗೂ ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳಲ್ಲಿ ಬಳಕೆ ಮಾಡಿದ ಇವಿಎಂಗಳನ್ನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಳಸಬಾರದು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಓಲೈಕೆಯಲ್ಲೇ ಮುಳುಗಿರುವ ರಾಜ್ಯ ಪೊಲೀಸ್‌ ಮಹಾನಿರ್ದೇಶಕರನ್ನು ಕೂಡಲೇ ವರ್ಗಾಯಿಸಲು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಟಿವಿ ಸೆಟ್‌ಗಳು, ಪ್ರೆಶರ್ ಕುಕ್ಕರ್‌ಗಳು, ಸೀರೆಗಳು ಮತ್ತು ಇತರ ಉಡುಗೊರೆಗಳ ವಿತರಣೆ ಮತ್ತು ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಬಗ್ಗೆ ಪಕ್ಷವು ಕಳವಳ ವ್ಯಕ್ತಪಡಿಸಿತು.

 ಭ್ರಷ್ಟಾಚಾರದ ಆರೋಪಗಳಿರುವುದರಿಂದ ಅಭಿವೃದ್ಧಿ ಯೋಜನೆಗಳಿಗೆ ಟೆಂಡರ್ ಕರೆಯದಂತೆ ಸರ್ಕಾರಕ್ಕೆ ಕ್ರಮ ಸೂಚನೆ ನೀಡಬೇಕೆಂದು ಒತ್ತಾಯಿಸಿತು.

ಬಳಿಕ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಎಂಎಲ್‌ಸಿ ಅಶ್ವತ್ಥ್ ನಾರಾಯಣಗೌಡ ಅವರು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಬೂತ್‌ಗಳನ್ನು ಗುರುತಿಸಿ ಅಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಆಯೋಗವನ್ನು ಒತ್ತಾಯಿಸಿದರು.

ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಬಿಜೆಪಿ ನಿಯೋಗ ಆಯೋಗಕ್ಕೆ ಮನವಿ ಸಲ್ಲಿಸಿತು.

ಬಳಿಕ, ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಮನೋಜ್‌ ಕುಮಾರ ಮೀನಾ, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಗಳಾದ ಎಂ.ವೆಂಕಟೇಶ್‌ ಕುಮಾರ್‌, ರಾಜೇಂದ್ರ ಚೋಳನ್‌ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚುನಾವಣಾ ಪೂರ್ವತಯಾರಿ ಬಗ್ಗೆ ತಂಡ ವಿವರಣೆ ಪಡೆದುಕೊಂಡಿತು. ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆಗೂ ಸಭೆ ನಡೆಸಿ, ಮುಖ್ಯ ಆಯುಕ್ತರು ಕೆಲವೊಂದು ಸಲಹೆ, ಸೂಚನೆ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com