ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಟೋಲ್ ಶುಲ್ಕ ಸಂಗ್ರಹ ಇಂದು ಆರಂಭ, ವಿವಿಧ ಸಂಘಟನೆಗಳಿಂದ ವಿರೋಧ-ಪ್ರತಿಭಟನೆ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು (Bengaluru-Mysuru Expressway) ಮೊನ್ನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಬಂದು ಉದ್ಘಾಟಿಸಿ ಹೋದ ದಿನವೇ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. 
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಣಿಮಿಣಿಕೆ ಟೋಲ್‌ ಪ್ಲಾಜಾದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಣಿಮಿಣಿಕೆ ಟೋಲ್‌ ಪ್ಲಾಜಾದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ

ಬೆಂಗಳೂರು/ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು (Bengaluru-Mysuru Expressway) ಮೊನ್ನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಬಂದು ಉದ್ಘಾಟಿಸಿ ಹೋದ ದಿನವೇ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. 

ಇಂದು ಮಾರ್ಚ್ 14ರಿಂದ ವಾಹನ ಸಂಚಾಲಕರಿಂದ ಟೋಲ್ ಸಂಗ್ರಹಣೆ ಆರಂಭವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು, ಸುಮಾರು 55 ಕಿಲೋ ಮೀಟರ್ ಹೈವೇಗೆ ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹಿಸಲು ನಿರ್ಧರಿಸಲಾಗಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಾಗುತ್ತದೆ.

ಟೋಲ್ ಶುಲ್ಕವೆಷ್ಟು?: ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂಪಾಯಿ ದರ ನಿಗದಿಪಡಿಸಲಾಗಿದೆ. ಎರಡೂ ಕಡೆಗೆ 205 ರೂಪಾಯಿ ನಿಗದಿಪಡಿಸಲಾಗಿದೆ. ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂಪಾಯಿ, ಅದೇ ದಿನ ಮರುಸಂಚಾರಕ್ಕೆ 330 ನಿಗದಿಪಡಿಸಿಲಾಗಿದೆ. ಬಸ್ ಅಥವಾ ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂಪಾಯಿ, ಕಡೆಗೆ 690 ರೂಪಾಯಿ ನಿಗದಿಪಡಿಸಲಾಗಿದೆ.

ಭಾರೀ ವಿರೋಧ, ಪ್ರತಿಭಟನೆ, ಪೊಲೀಸ್ ಭದ್ರತೆ: ಸರ್ಕಾರ ಇಂದು ಬೆಳಗ್ಗೆ ಟೋಲ್ ಶುಲ್ಕ ಸಂಗ್ರಹಿಸಲು ಮುಂದಾಗುತ್ತಿದ್ದಂತೆ ವಿವಿಧ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ವಿವಿಧ ಸಂಘಟನೆಗಳು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ.

ಟೋಲ್ ಸಂಗ್ರಹ ವಿರೋಧಿಸಿ ಇಂದು ಬೆಳಗ್ಗೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ಸವಾರರಿಗೆ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಸಂಚಾರ ದಟ್ಟಣೆ ಉಂಟಾಗುತ್ತಿದೆ. 

ಈ ಹಿನ್ನೆಲೆಯಲ್ಲಿ  ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸರ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್ ಪಿಗೆ ಮನವಿ ಮಾಡಿದ್ದಾರೆ. ಅದರಂತೆ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಲಾಗಿದೆ. ಎಸ್ ಪಿ ಕಾರ್ತಿಕ್ ರೆಡ್ಡಿ,‌ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com